ADVERTISEMENT

ರಂಗೇರುತ್ತಿದೆ ಚುನಾವಣಾ ಕಣ

ಗುಬ್ಬಿ: ಜೆಡಿಎಸ್‌, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಡುವೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 6:55 IST
Last Updated 12 ಡಿಸೆಂಬರ್ 2020, 6:55 IST
ಪಂಚಾಕ್ಷರಿ
ಪಂಚಾಕ್ಷರಿ   

ಗುಬ್ಬಿ: ಕೆಲ ತಿಂಗಳುಗಳಿಂದ ಕೊರೊನಾ ಗುಂಗಿನಲ್ಲಿದ್ದ ತಾಲ್ಲೂಕಿನ ಜನರು ಈಗ ಎಲ್ಲವನ್ನು ಮರೆತು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಕ್ರಿಯರಾಗುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷರಹಿತವಾಗಿದ್ದರೂ, ತಾಲ್ಲೂಕಿನಲ್ಲಿ ಮೂರು ಪ್ರಮುಖ ಪಕ್ಷಗಳ ನಾಯಕರೂ ನಿಷ್ಠಾವಂತ ಕಾರ್ಯಕರ್ತರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಮುಂದಿನ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಅಡಿಪಾಯ ಹಾಕಿಕೊಳ್ಳುವ ಯತ್ನದಲ್ಲಿದ್ದಾರೆ.

ಬಿಜೆಪಿ ಸ್ಥಳೀಯ ನಾಯಕರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರ ಮಾರ್ಗದರ್ಶನದಲ್ಲಿ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯುವ ತವಕದಲ್ಲಿದ್ದಾರೆ. ಇದಕ್ಕಾಗಿ ಬಿಜೆಪಿಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ.

ADVERTISEMENT

ಜೆಡಿಎಸ್‌ನಿಂದ ಒಂದು ಹೆಜ್ಜೆ ಹೊರಗೆ ಇಟ್ಟಂತಿರುವ ಶಾಸಕ ಎಸ್‌.ಆರ್.ಶ್ರೀನಿವಾಸ್, ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಬೆನ್ನೆಲುಬಾಗಿ ನಿಲ್ಲುವಂತಹ ಕಾರ್ಯಕರ್ತರನ್ನು ಗೆಲ್ಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ತಮ್ಮದೇ ಪಡೆ ಕಟ್ಟಿಕೊಂಡು ತಾಲ್ಲೂಕಿನಾದ್ಯಂತ ಚುನಾವಣಾ ಕಣವನ್ನು ರಂಗೇರಿಸುತ್ತಿದ್ದಾರೆ.

ಕಾಂಗ್ರೆಸ್‌ನಲ್ಲಿ ಸ್ಥಳೀಯವಾಗಿ ವರ್ಚಸ್ಸುಳ್ಳ ನಾಯಕರು ಇಲ್ಲದಿರುವುದು ಪಕ್ಷಕ್ಕೆ ಹಿನ್ನಡೆಯಾಗಿದೆ. ಹೊನ್ನಗಿರಿ ಗೌಡರು ಕಾಂಗ್ರೆಸ್‌ನಲ್ಲಿದ್ದರೂ ಸ್ಥಳೀಯ ನಾಯಕರಿಂದ ಅಂತರ ಕಾಪಾಡಿಕೊಂಡಿರುವುದು ಪಕ್ಷಕ್ಕೂ ಹಿನ್ನಡೆಯಾಗಿದೆ. ಹೀಗಾಗಿ ಕಾಂಗ್ರೆಸ್‌ನಲ್ಲಿ ಜಿಲ್ಲಾಮಟ್ಟದ ನಾಯಕರಾದ ಡಾ. ಜಿ.ಪರಮೇಶ್ವರ, ಹಾಲಪ್ಪ ಹಾಗೂ ಕೆ.ಎನ್.ರಾಜಣ್ಣ ಅವರನ್ನೇ ನೆಚ್ಚಿಕೊಳ್ಳು
ವಂತಾಗಿದೆ.

ತಾಲ್ಲೂಕಿನ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ಬಹಿಷ್ಕರಿಸಿದ್ದರೂ ಆ ಬಗ್ಗೆ ಯಾವ ಪಕ್ಷದ ನಾಯಕರು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಶೇ 50 ಸೀಟುಗಳು ಮಹಿಳೆಯರಿಗೆ ಮೀಸಲಿರುವ ಕಾರಣ ಹೊಸ ಅಭ್ಯರ್ಥಿಗಳು ಕಣಕ್ಕೆ ಬರುತ್ತಿರುವುದು ಚುನಾವಣಾ ಕಣದ ಕಳೆಯನ್ನು ಹೆಚ್ಚಿಸಿದೆ.

ತಾಲ್ಲೂಕಿನ ಕೆಲವೆಡೆ ಅವಿರೋಧ ಆಯ್ಕೆ, ಹರಾಜು ಪ್ರಕ್ರಿಯೆ ಮೂಲಕ ಆಯ್ಕೆಯಾಗುವ ಪ್ರಯತ್ನಗಳೂ ನಡೆದಿವೆ. ತಾಲ್ಲೂಕಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಣಾಹಣಿ ನಡೆಸುತ್ತಿದ್ದು, ಕಾಂಗ್ರೆಸ್ ಅಸ್ಥಿತ್ವಕ್ಕಾಗಿ ಹೋರಾಟ ನಡೆಸುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.