ತುಮಕೂರು: ನಗರದ ಶೆಟ್ಟಿಹಳ್ಳಿ ಗೇಟ್ ಸಮೀಪದ ಅಂಡರ್ಪಾಸ್ನ ಸರ್ವೀಸ್ ರಸ್ತೆಯಲ್ಲಿ ಗುಂಡಿ ಬಿದ್ದು, ಆತಂಕ ಮೂಡಿಸಿದೆ.
ಕಳೆದ ಕೆಲ ದಿನಗಳಿಂದ ಮಳೆ ಬೀಳುತ್ತಿದ್ದು, ಮಂಗಳವಾರ ರಾತ್ರಿ ರಾಘವೇಂದ್ರ ಸ್ವಾಮಿ ಮಠಕ್ಕೆ ತಿರುವು ಪಡೆಯುವ ಅಂಡರ್ ಪಾಸ್ ಮೇಲು ಭಾಗದ ರಸ್ತೆ ಕುಸಿದಿದೆ.
ರಸ್ತೆ ಕುಸಿದಿರುವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಮಹಾನಗರ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಪಾಲಿಕೆ ಸಿಬ್ಬಂದಿ ತಾತ್ಕಾಲಿಕವಾಗಿ ಗುಂಡಿಯನ್ನು ಮುಚ್ಚಿದ್ದಾರೆ. ಈಗ ಸದ್ಯಕ್ಕೆ ಗುಂಡಿ ಮುಚ್ಚಿದ್ದು, ಗುರುವಾರ ಬೆಂಗಳೂರಿಂದ ತಜ್ಞರ ತಂಡ ಬಂದು ಪರಿಶೀಲನೆ ನಡೆಸಲಿದೆ. ನಂತರ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶೆಟ್ಟಿಹಳ್ಳಿ ರಸ್ತೆಯಲ್ಲಿ ಅಂಡರ್ಪಾಸ್ ನಿರ್ಮಿಸಿದ ದಿನದಿಂದಲೂ ಒಂದಿಲ್ಲೊಂದು ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸ್ವಲ್ಪ ಜೋರಾಗಿ ಮಳೆ ಬಂದರೆ ಅಂಡರ್ಪಾಸ್ನಲ್ಲಿ ನೀರು ನಿಂತು ವಾಹನ ಸಂಚಾರ ಕಷ್ಟಕರವಾಗುತ್ತದೆ. ಪ್ರತಿ ಬಾರಿ ಮಳೆ ಬಂದಾಗಲೂ ವಾಹನ ಸವಾರರು ಸಂಕಷ್ಟ ಎದುರಿಸುತ್ತಾರೆ. ಕೆಲವೊಮ್ಮೆ ಪಂಪು, ಮೋಟಾರ್ ಬಳಸಿ ನೀರನ್ನು ಹೊರಗೆ ಹಾಕಲಾಗುತ್ತದೆ.
ನಗರದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಹೂಳು ತುಂಬಿರುವ ಚರಂಡಿಗಳನ್ನು ಗಮನಿಸಿ ಸ್ವಚ್ಛಗೊಳಿಸುವ ಮೂಲಕ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.