ತುಮಕೂರು: ರಾಜ್ಯದಲ್ಲಿ ಭೀಕರ ಅಪಘಾತವಾದರೂ ನಮ್ಮ ಮುಖ್ಯಮಂತ್ರಿ ಅವರು ಅದನ್ನೆಲ್ಲಾ ಮರೆತು ಬಹಳ ಆನಂದವಾಗಿ ಒಂದು ಚಿತ್ರದ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ಅವರಿಗೆ ಜನರ ಸಮಸ್ಯೆಗಿಂತ ಚಿತ್ರದ ಪ್ರಚಾರ ಮಹತ್ವದ್ದಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
ಜಿಲ್ಲಾ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ, ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ನಡೆದ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾಲ್ಕು ಗಂಟೆಗಳ ದೊಡ್ಡ ಮಟ್ಟದ ಸಮಯವನ್ನು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಸಿನಿಮಾ ಪ್ರಚಾರಕ್ಕೆ ನೀಡಿದ್ದಾರೆ. ಅದರಲ್ಲಿ ಅಂತಹ ವಿಶೇಷ ಏನಿದೆ ಎನ್ನುವುದೇ ತಿಳಿಯುತ್ತಿಲ್ಲ ಎಂದರು.
ಜನರ ಸಮಸ್ಯೆಗಳನ್ನು ಬಗೆಹರಿಸಿ ಚುನಾವಣೆಗೆ ಸಿದ್ಧರಾಗುವ ಬದಲು ಭಾವನಾತ್ಮಕವಾಗಿ ಮತ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ಈ ವಿಷಯದ ಕುರಿತು ಜಾಗೃತರಾಗಬೇಕು ಎಂದೂ ಹೇಳಿದರು.
ಸರ್ಕಾರ ನಿರ್ಲಕ್ಷ್ಯದಿಂದ ಸಮಸ್ಯೆ ಎದುರಾಗಿದೆ. ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾದರೆ ಪರೀಕ್ಷೆ ಬರೆಯಲು ವಿಶೇಷ ಅವಕಾಶ ಕಲ್ಪಿಸಬೇಕು. ಮೃತಪಟ್ಟವರು ಮತ್ತು ಗಾಯಗೊಂಡವರು ಅತ್ಯಂತ ಕಡು ಬಡವರಿದ್ದಾರೆ. ಮೃತ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡುವುದರ ಜೊತೆಗೆ ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.