ಗುಬ್ಬಿ: ಪಟ್ಟಣದ ಬಸ್ ನಿಲ್ದಾಣ ಸುತ್ತಮುತ್ತ ಪಾದಾಚಾರಿ ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತಿರುಗಾಡಲು ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಬುಧವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಪಾದಚಾರಿ ರಸ್ತೆ ಒತ್ತುವರಿ ತೆರವಿಗೆ ಮುಂದಾದರು.
ವ್ಯಾಪಾರದ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದರಿಂದ ಕ್ರಮ ಕೈಗೊಳ್ಳಲು ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗಿತ್ತು. ಪಾದಚಾರಿ ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದವರಿಗೆ ಈಗಾಗಲೇ ನಿಯಮಾನುಸಾರ ತಿಳುವಳಿಕೆ ನೀಡಿದ್ದರೂ ಹಲವರು ಅಂಗಡಿ ತೆರವುಗೊಳಿಸದ ಕಾರಣ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ ತೆರವು ಕಾರ್ಯಾಚರಣೆಗೆ ಇಳಿದರು.
ಪ್ರಾರಂಭದಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಸ್ತೆ ಬದಿ ವ್ಯಾಪಾರಿಗಳು ನಿಯಮಾನಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ತೆರವಿಗೆ ಮುಂದಾದರು.
ಹಲವರು ಸಂತೆ ಮೈದಾನದ ರಸ್ತೆಗೆ ಹೊಂದಿಕೊಂಡಿರುವ ಕೆಎಸ್ಆರ್ಟಿಸಿ ಮಳಿಗೆಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದರೂ ರಸ್ತೆ ಬದಿಯಲ್ಲಿಯೇ ವ್ಯಾಪಾರ ಮಾಡುತ್ತಿದ್ದರು. ಅಧಿಕಾರಿಗಳು ಸ್ಥಳದಲ್ಲಿಯೇ ನಿಂತು ಒತ್ತುವರಿ ತೆರೆವುಗೊಳಿಸಿದರು. ವ್ಯಾಪಾರದ ಸ್ಥಳದಲ್ಲಿಲ್ಲದ ವ್ಯಾಪಾರಿಗಳಿಗೆ ಒಂದು ದಿನದ ಗಡುವು ನೀಡಿ ತೆರವು ಕಾರ್ಯಚರಣೆ ಮುಂದೂಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.