ಕುಣಿಗಲ್: ಮೈತ್ರಿ ಸರ್ಕಾರದ ಅಸ್ಥಿರತೆಗೆ ಬಿಜೆಪಿ ಯತ್ನಿಸುತ್ತಿಲ್ಲ. ಅತೃಪ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಯತ್ನಿಸುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವಥನಾರಾಯಣ್ ಗೌಡ ತಿಳಿಸಿದರು.
ಕುಣಿಗಲ್ ಪುರಸಭೆ ಚುನಾವಣೆಯ 7 ವಾರ್ಡ್ಗಳ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
74 ಶಾಸಕರ ಬೆಂಬಲವಿರುವ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಹಾಗಾದರೆ 104 ಶಾಸಕರಿರುವ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಇರಾದೆ ವ್ಯಕ್ತಪಡಿಸಿದರೆ ತಪ್ಪೇನಿಲ್ಲ ಎಂದರು.
‘ಹೈದರಾಬಾದ್ ಕರ್ನಾಟಕದ ಪ್ರಾಂತ್ಯದಲ್ಲಿ ಸಮಸ್ಯೆಗಳನ್ನು ಬಗೆ ಹರಿಸಲು ವಿಫಲರಾಗಿರುವ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಉಳಿದೆಲ್ಲ ಅಧಿಕಾರವನ್ನು ಅನುಭವಿಸಿದ್ದಾರೆ. ಹಿರಿಯರಾದ ಖರ್ಗೆ ಮತ್ತು ಪುತ್ರ ಪ್ರಿಯಾಂಕ್ ಖರ್ಗೆ ಪ್ರಧಾನಿ ನರೇಂದ್ರಮೋದಿ ಬಗ್ಗೆ ಲಘುವಾಗಿ ಮಾತನಾಡುವುದನ್ನು ಬಿಡಬೇಕು. ರಾಜಕಾರಣದಲ್ಲಿ ಟೀಕೆಗಳು ಆರೋಗ್ಯಕರವಾಗಿರಬೇಕು ಇಲ್ಲದಿದ್ದರೇ ಕಾಲವೇ ಪಾಠ ಕಲಿಸುತ್ತದೆ’ ಎಂದರು.
ಬಿಜೆಪಿ ಮುಖಂಡ ಡಿ.ಕೃಷ್ಣಕಮಾರ್ ಮಾತನಾಡಿ, ಪುರಸಭೆಯಲ್ಲಿ ಆಡಳಿತ ಮಾಡಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದವರು ಮೂಲಸೌಲಭ್ಯ ನೀಡುವಲ್ಲಿ ವಿಫಲರಾಗಿದ್ದಾರೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಪುರಸಭೆ ವ್ಯಾಪ್ತಿಯ 17 ವಾರ್ಡ್ಗಳಲ್ಲಿ ಹೆಚ್ಚಿನ ಮತಗಳು ಲಭಿಸಿವೆ. ಪುರಸಭೆ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿ ಅಧಿಕಾರ ಹಿಡಿಯುವುದಾಗಿ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಬಲರಾಂ, ಮುಖಂಡ ಭರತೇಶ್ ಮತ್ತು ಅಭ್ಯರ್ಥಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.