ತುಮಕೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ 7ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಎಚ್.ಕೆ.ರಂಗಸ್ವಾಮಿ ಅವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ ₹ 20 ಲಕ್ಷ ದಂಡ ವಿಧಿಸಿದೆ.
ರಂಗಸ್ವಾಮಿ ಅವರು 5 ವರ್ಷಗಳ ಹಿಂದೆ ಸೇವೆಯಿಂದ ನಿವೃತ್ತರಾಗಿದ್ದಾರೆ.
ಸರ್ಕಾರಿ ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಬಗ್ಗೆ ಜಿಲ್ಲಾ ಲೋಕಾಯುಕ್ತವು ಮಾಹಿತಿ ಸಂಗ್ರಹಿಸಿ 2005ರ ಅ.29ರಂದು ರಂಗಸ್ವಾಮಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಲೋಕಾಯುಕ್ತ ಡಿವೈಎಸ್ಪಿ ಅಶ್ವತ್ಥನಾರಾಯಣ ಪ್ರಕರಣದ ತನಿಖೆ ನಡೆಸಿದ್ದರು. 2009ರ ಜ.21ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ದಂಡ ಪಾವತಿಸಲು ತಪ್ಪಿದರೆ ಮತ್ತೆ 1 ವರ್ಷ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಆರ್.ಪಿ.ಪ್ರಕಾಶ್ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.