ADVERTISEMENT

ಕಾರ್ಮಿಕರ ಸಂಘಟನೆಗಳ ಪ್ರತಿಭಟನೆ

ಉದ್ದೇಶಿತ ಸಾಮಾಜಿಕ ಸುರಕ್ಷಾ ಮಸೂದೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2019, 11:38 IST
Last Updated 9 ಆಗಸ್ಟ್ 2019, 11:38 IST
ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು
ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು   

ತುಮಕೂರು: ಕೇಂದ್ರ ಸರ್ಕಾರದ ಉದ್ದೇಶಿತ ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆ-2018 ಕೈ ಬಿಡಬೇಕು. ಕಟ್ಟಡ ಕಾರ್ಮಿಕರ ಕಾನೂನು 1996 ರಕ್ಷಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಕಟ್ಟಡ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.

ಎಐಟಿಯುಸಿ ಮತ್ತು ಸಿಐಟಿಯು ನೇತೃತ್ವದ ಪ್ರತಿಭಟನೆಯಲ್ಲಿ ನೂರಾರು ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು. ನಂತರ ಈ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕಟ್ಟಡ ನಿರ್ಮಾಣ ಮತ್ತು ಕ್ವಾರಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಗಿರೀಶ್ ಮಾತನಾಡಿ, ದುಡಿಯುವ ವರ್ಗಕ್ಕೆ ಅನುಕೂಲ ಕಲ್ಪಿಸುತ್ತಿರುವ 1996ರ ಕಾಯ್ದೆಯನ್ನು ಕೇಂದ್ರ ಸರ್ಕಾರ ಬದಿಗಿರಿಸಿ ಉದ್ಯಮಿಗಳಿಗೆ ಅನುಕೂಲ ಆಗುವಂತಹ ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆ ಜಾರಿಗೊಳಿಸಲು ಮುಂದಾಗಿದೆ ಎಂದು ದೂರಿದರು.

ADVERTISEMENT

ಇದರಿಂದ ದೇಶದ 4 ಕೋಟಿ, ಕರ್ನಾಟಕದ 15 ಲಕ್ಷ ಕಟ್ಟಡ ಕಾರ್ಮಿಕರಿಗೆ ನೀಡಿರುವ ಗುರುತಿನ ಚೀಟಿಗಳು ರದ್ದಾಗಲಿವೆ. ತೆರಿಗೆ ರೂಪದಲ್ಲಿ ಸಂಗ್ರಹಿಸಿರುವ ₹ 70 ಸಾವಿರ ಕೋಟಿ ಉದ್ಯಮಿಗಳ ಪಾಲಾಗಲಿದೆ. ದುಡಿಯುವ ವರ್ಗದ ಹೊಟ್ಟೆಯ ಮೇಲೆ ಹೊಡೆಯುವ ಇಂತಹ ಕಾನೂನನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಉಮೇಶ್, ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ತರಲು ಉದ್ದೇಶಿಸಿರುವ ಮಸೂದೆಯಿಂದ ರಾಜ್ಯದ ಹಿಡಿತ ಹೋಗಿ, ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆ ಮುಖ ಮಾಡಬೇಕಾಗುತ್ತದೆ. ಇದು ಉದ್ಯಮಿಗಳಿಗೆ ವರ್ಷಕ್ಕೆ ಸಾವಿರಾರು ಕೋಟಿ ಲಾಭ ಮಾಡಿಕೊಡುವ ಮತ್ತೊಂದು ಫಸಲ್ ಬಿಮಾ ಯೋಜನೆ ಆಗುವ ಸಾಧ್ಯತೆ ಇದೆ ಎಂದು ದೂರಿದರು.

ಎಐಟಿಯುಸಿ ಸಂಘಟನಾ ಸಂಚಾಲಕ ಶಶಿಕಾಂತ್, ಮುಖಂಡರಾದ ಸತ್ಯನಾರಾಯಣ, ದೊಡ್ಡತಿಮ್ಮಯ್ಯ ಗುಬ್ಬಿ, ದೇವರಾಯಪಟ್ಟಣದ ರಂಗನಾಥ್, ಸಿಐಟಿಯು ಗೌರವಾಧ್ಯಕ್ಷ ಗೋವಿಂದರಾಜು, ಶಂಕರಪ್ಪ, ಲಕ್ಷ್ಮಣ್, ಖಲೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.