ಮಧುಗಿರಿ: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನ ಗಾಡಿಯ ಮೂಲಕ ಬುಧವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಮಾವಣೆಗೊಂಡು ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ -2 ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷ ಆರ್.ರಾಜೇಂದ್ರ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯ ವಿರುದ್ಧ 75 ದಿನಗಳಿಂದ ಲಕ್ಷಾಂತರ ರೈತರು ಹೋರಾಟ ಮಾಡುತ್ತಿದ್ದರೂ ಅವರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ರೈತರಿಗೆ ಭೂಮಿ ನೀಡಿದರೆ, ಬಿಜೆಪಿ ಸರ್ಕಾರ ರೈತರ ಭೂಮಿಗಳನ್ನು ಕಸಿಯುತ್ತಿದೆ. ತಕ್ಷಣ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಯನ್ನು ಪದೇ ಪದೇ ಏರಿಕೆ ಮಾಡುತ್ತಿರುವುದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ರಾಜ್ಯ ಸಹಕಾರ ಮಹಾ ಮಂಡಳ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್ ಬಾಬು, ಪುರಸಭೆ ಅಧ್ಯಕ್ಷ ತಿಮ್ಮರಾಜು, ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಎಂ.ವಿ.
ಗೋವಿಂದರಾಜು, ಅಯೂಬ್, ತಾ.ಪಂ. ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಜಿ.ಪಂ.ಮಾಜಿ ಸದಸ್ಯ ಎಸ್.ಡಿ.ಕೃಷ್ಣಪ್ಪ, ತಾ.ಪಂ.ಸದಸ್ಯರಾದ ಟಿ.ಡಿ.ವೆಂಕಟೇಶ್, ಸೊಸೈಟಿ ರಾಮಣ್ಣ, ಗ್ರಾ.ಪಂ.ಮಾಜಿ ಅಧ್ಯಕ್ಷ ವಿ.ಆರ್.ಭಾಸ್ಕರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ, ವೆಂಕಟೇಶ್, ಮುಖಂಡರಾದ ಎಂ.ಎಸ್.ಮಲ್ಲಿಕಾರ್ಜುನಯ್ಯ, ಎಂ.ಎಸ್.ಶಂಕರ ನಾರಾಯಣ್, ರಾಜಗೋಪಾಲ್, ಎಸ್.ಬಿ.ಟಿ.ರಾಮು, ಸಿದ್ದಾಪುರ ರಂಗ ಶ್ಯಾಮಣ್ಣ, ಡಿ.ಟಿ.ಸಂಜೀವಮೂರ್ತಿ, ಮರಿಯಪ್ಪ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.