ADVERTISEMENT

ಬಾಕಿ ವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 0:59 IST
Last Updated 29 ಜನವರಿ 2021, 0:59 IST
ಪಾವಗಡ ತಹಶೀಲ್ದಾರ್ ಕಚೇರಿ ಮುಂಭಾಗ ಹೊರಗುತ್ತಿಗೆ ನೌಕರರು ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟಿಸಿದರು
ಪಾವಗಡ ತಹಶೀಲ್ದಾರ್ ಕಚೇರಿ ಮುಂಭಾಗ ಹೊರಗುತ್ತಿಗೆ ನೌಕರರು ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟಿಸಿದರು   

ಪಾವಗಡ: ಸರ್ಕಾರಿ ವಸತಿ ನಿಲಯ, ವಸತಿ ಶಾಲೆಗಳಲ್ಲಿ ಡಿ ಗ್ರೂಪ್ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಕೊಡಬೇಕು ಎಂದು ಒತ್ತಾಯಿಸಿ ಗುರುವಾರ ತಹಶೀಲ್ದಾರ್ ಕಚೇರಿ ಮುಂದೆ ಹೊರ ಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಪ್ರತಿಭಟಿಸಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿ ಆಶ್ರಮ ಶಾಲೆ, ಮೊರಾರ್ಜಿ ವಸತಿ ಶಾಲೆ, ಚೆನ್ನಮ್ಮ, ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ದಶಕಗಳಿಂದ ಅಡುಗೆ, ಸ್ವಚ್ಛತೆ, ಕಾವಲು ಕೆಲಸಗಳನ್ನು ಮಾಡಲಾಗುತ್ತಿದೆ. ಕೋವಿಡ್ ಪೂರ್ವದ ಕೆಲ ತಿಂಗಳುಗಳ ವೇತನ ಪಾವತಿಸಿಲ್ಲ. ಜೊತೆಗೆ ಲಾಕ್‌ಡೌನ್ ಅವಧಿಯ ವೇತನ ಸಂದಾಯವಾಗಿಲ್ಲ. ಇತರೆ ಇಲಾಖೆಗಳ ಹೊರ ಗುತ್ತಿಗೆಗೆ ನೌಕರರಿಗೆ ವೇತನ ನೀಡಿ, ವಸತಿ ಶಾಲೆಗಳಲ್ಲಿ ಕೆಲಸ ಮಾಡುವವರಿಗೆ ವೇತನ ನೀಡದಿರುವುದು ಖಂಡನೀಯ ಎಂದು ಪ್ರತಿಭಟನೆ ನಿರತರು ಆರೋಪಿಸಿದರು.

ಆರ್ಥಿಕವಾಗಿ ಹಿಂದುಳಿದಿರುವ, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ವೇತನವಿಲ್ಲದ ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗುತ್ತಿದೆ. ಇತರೆ ಆದಾಯದ ಮೂಲಗಳು ಇಲ್ಲದೆ ಡಿ ಗ್ರೂಪ್ ನೌಕರರಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ. ಹೀಗಾಗಿ ಕೋವಿಡ್ ಪೂರ್ವ, ಲಾಕ್‌ಡೌನ್ ಅವಧಿಯ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಬೇಡಿಕೆ ಈಡೇರಿಸುವಂತೆ ಶಿರಸ್ತೇದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಜಯಮ್ಮ, ಲಲಿತಮ್ಮ, ಅನುಸೂಯಮ್ಮ, ಯಶೋದಮ್ಮ, ಬುಡ್ಡಮ್ಮ, ಸುನಂದಮ್ಮ, ಮೂರ್ತಿ, ವೆಂಕಟಲಕ್ಷ್ಮಮ್ಮ, ಮಹಾಲಕ್ಷ್ಮಿ, ಕುಮಾರಿ ಬಾಯಿ, ಸರಸ್ವತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.