ADVERTISEMENT

ತುಮಕೂರು | ತೈಲ ಬೆಲೆ ಹೆಚ್ಚಳಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 16:51 IST
Last Updated 30 ಜೂನ್ 2020, 16:51 IST
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಿಪಿಎಂ ಕಾರ್ಯಕರ್ತರು ತುಮಕೂರಿನ ಜೆ.ಸಿ.ರಸ್ತೆಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಿಪಿಎಂ ಕಾರ್ಯಕರ್ತರು ತುಮಕೂರಿನ ಜೆ.ಸಿ.ರಸ್ತೆಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು   

ತುಮಕೂರು: ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿರುವುದನ್ನು ಖಂಡಿಸಿ ಸಿಪಿಎಂ ಕಾರ್ಯಕರ್ತರು ನಗರದ ಜೆ.ಸಿ.ರಸ್ತೆಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಮಾತನಾಡಿ, ‘ಕೇಂದ್ರ ಸರ್ಕಾರ ಪೆಟ್ರೊಲ್, ಡೀಸೆಲ್ ಬೆಲೆಗಳನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಮಾಡುತ್ತಿದೆ. ಇದನ್ನು ಕೂಡಲೇ ಕಡಿಮೆ ಮಾಡಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕಡಿಮೆ ಇದ್ದರೂ ಸಹ ಕೇಂದ್ರ ಸರ್ಕಾರ ಭಾರತದಲ್ಲಿ ತೈಲ ಬೆಲೆ ಹೆಚ್ಚಿಸುವ ಮೂಲಕ ಜನರ ಮೇಲೆ ಬರೆ ಎಳೆದಿದೆ’ ಎಂದು ತಿಳಿಸಿದರು.

ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಜನರಿಗೆ ಇಂಧನ ಬೆಲೆ ಏರಿಕೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಇಂತಹ ಸ್ಥಿತಿಯಲ್ಲೂ ಸಹ ಕೇಂದ್ರ ಸರ್ಕಾರ ಇದರ ಅರಿವೇ ಇಲ್ಲದಂತೆ ಪ್ರತಿದಿನ ಬೆಲೆ ಹೆಚ್ಚಳ ಮಾಡುತ್ತಿದೆ. ಅಧಿಕಾರದಲ್ಲಿ ಇಲ್ಲದೇ ಇದ್ದ ಸಂದರ್ಭದಲ್ಲಿ ಬೆಲೆ ಏರಿಕೆಯಾದಾಗ ಬೊಬ್ಬೆಯಿಡುತ್ತಿದ್ದ ಬಿಜೆಪಿ ನಾಯಕರು, ತಮ್ಮದೇ ಸರ್ಕಾರ ಬೆಲೆ ಏರಿಕೆ ಮಾಡಿದರೂ ಸುಮ್ಮನಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಸಿಪಿಎಂ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್, ‘ಪ್ರಧಾನಿ ಮೋದಿ ಜನತೆಗೆ ಭರವಸೆಗಳ ಮಹಾಪೂರವನ್ನೇ ತಮ್ಮ ಭಾಷಣಗಳ ಮೂಲಕ ಹರಿಸುತ್ತಿದ್ದಾರೆ. ಆದರೆ ಜನರು ಮಾತ್ರ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಪ್ರಧಾನಿಗೆ ಕಾರ್ಪೋರೇಟ್ ಕಂಪನಿಗಳ ಕುಳಗಳು ಮಾತ್ರ ಕಣ್ಣಿಗೆ ಕಾಣುತ್ತಿದ್ದಾರೆ’ ಎಂದು ಟೀಕಿಸಿದರು.

ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲದೆ ಮಾರಾಟ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಹೋಟೆಲ್‌ಗಳು ವ್ಯಾಪಾರ ವಹಿವಾಟು ಇಲ್ಲದೆ ಬಾಗಿಲು ಮುಚ್ಚಿವೆ. ಇಂತಹ ಸಂದರ್ಭದಲ್ಲಿ ಜನರ ಆರ್ಥಿಕ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಅದುಬಿಟ್ಟು ಬರೀ ಮಾತಿನಲ್ಲಿ ಸೌಧ ಕಟ್ಟುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಿಪಿಎಂ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ, ಮುಖಂಡರಾದ ಲಕ್ಷ್ಮಿಕಾಂತ್, ಖಲೀಲ್, ಮುತ್ತುರಾಜ್, ಇಂತು, ನರಸಿಂಹಮೂರ್ತಿ, ಖಾಸಿಂ ಸಾಬ್, ರೇವಣ್ಣ, ವಸೀಂ, ರವಿಕುಮಾರ್, ಶ್ರೀಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.