ತುಮಕೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕೂಡಲೇ ಉಪನ್ಯಾಸಕರನ್ನು ನೇಮಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ವಾಣಿಜ್ಯ ವಿಭಾಗದ ಮುಖ್ಯ ವಿಷಯಗಳಾದ ಲೆಕ್ಕಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯಕ್ಕೆ ಉಪನ್ಯಾಸಕರಿಲ್ಲ. ಐದು ತಿಂಗಳಾದರೂ ಉಪನ್ಯಾಸಕರನ್ನು ನೇಮಿಸಿಲ್ಲ. ಮುಖ್ಯ ವಿಷಯಗಳ ಪಠ್ಯ ಬೋಧನೆಯೂ ಸಮರ್ಪಕವಾಗಿ ನಡೆದಿಲ್ಲ ಎಂದು ದೂರಿದರು.
ಈಗ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾ ಪಟ್ಟಿ ಪ್ರಕಟವಾಗಿದೆ. ಕೇವಲ 3 ತಿಂಗಳು ಮಾತ್ರ ಕಾಲಾವಕಾಶವಿದ್ದು, ಕೂಡಲೇ ಉಪನ್ಯಾಸಕರನ್ನು ನೇಮಿಸಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯ ಮಾಡಿದರು.
ಎಬಿವಿಪಿ ಸಂಘಟಕರಾದ ಅಪ್ಪು ಪಾಟೀಲ್, ಚಕ್ರವರ್ತಿ, ಗಿರೀಶ್ ಆಚಾರ್ಯ, ಭರತ್, ಕುಶಾಲ್ ದರ್ಶನ್, ಮಾರುತಿ, ಗಿರೀಶ್, ದೀಕ್ಷಿತ್, ಮಮತಾ, ಹರ್ಷಿತಾ ಮತ್ತಿತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.