ADVERTISEMENT

ಪಾವಗಡ | ರೈತರ ರಸ್ತೆ ತಡೆ; ಪ್ರತಿಭಟನಾ ಮೆರವಣಿಗೆ

ಸಮಸ್ಯೆ ಪರಿಹಾರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 14:27 IST
Last Updated 15 ಏಪ್ರಿಲ್ 2025, 14:27 IST
ಪಾವಗಡ ತಹಶೀಲ್ದಾರ್ ಕಚೇರಿ ಮುಂಭಾಗದ ಮುಖ್ಯ ರಸ್ತೆಯಲ್ಲಿ ರೈತರು ಮಂಗಳವಾರ ರಸ್ತೆತಡೆ ನಡೆಸಿದರು
ಪಾವಗಡ ತಹಶೀಲ್ದಾರ್ ಕಚೇರಿ ಮುಂಭಾಗದ ಮುಖ್ಯ ರಸ್ತೆಯಲ್ಲಿ ರೈತರು ಮಂಗಳವಾರ ರಸ್ತೆತಡೆ ನಡೆಸಿದರು   

ಪಾವಗಡ: ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿರುವ ರೈತರಿಗೆ ಕೂಡಲೇ ಭೂಮಿ ಮಂಜೂರು ಮಾಡಬೇಕು. ರೈತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ರಸ್ತೆ ತಡೆ ನಡೆಸಿದರು.

ಹಲವು ದಶಕಗಳಿಂದ ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಶೇಂಗಾ, ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿ ವರ್ಷಗಳು ಕಳೆದರೂ ಅರ್ಹರಿಗೆ ಭೂಮಿ ಮಂಜೂರು ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು.

ಅಕ್ರಮ ಸಕ್ರಮದಡಿ ಅರ್ಜಿ ಹಾಕಿದವರೂ ಕಚೇರಿ ಅಲೆಯುತ್ತಿದ್ದಾರೆಯೇ ಹೊರತು ಅವರ ಹೆಸರಿಗೆ ಖಾತೆ, ಪಹಣಿ ಆಗಿಲ್ಲ. ಸರ್ಕಾರಿ ಜಮೀನುಗಳಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿರುವವರಿಗೆ ಭೂಮಿಯೇ ಆಧಾರ. ಆದರೆ ರೈತರ ಸಮಸ್ಯೆಗಳ ಬಗ್ಗೆ ಅರಿವಿರದ ಅಧಿಕಾರಿಗಳು ಮಂಜೂರಾತಿ ಪತ್ರ, ಖಾತೆ, ಪಹಣಿ ಮಾಡಿಕೊಡದೆ ರೈತರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ದೂರಿದರು.

ADVERTISEMENT

ತಾಲ್ಲೂಕಿನ ವೆಂಕಟಾಪುರ ಸರ್ವೆ ನಂಬರ್ 494 ಸರ್ಕಾರಿ ಜಮೀನಾಗಿದ್ದು, ಹಲವು ಮಂದಿ ರೈತರು ಈ ಜಮೀನಿನಲ್ಲಿ ತಾತ- ಮುತ್ತಾತರ ಕಾಲದಿಂದಲೂ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಅಧಿಕಾರಿಗಳು ಕೃಷಿ ಜಮೀನನ್ನು ನಿವೇಶನವನ್ನಾಗಿ ಪರಿವರ್ತಿಸಲು ಅಳತೆ ನಡೆಸಲು ಮುಂದಾಗಿದ್ದಾರೆ. ಇದರಿಂದ ಸಾಕಷ್ಟು ರೈತರ ಕುಟುಂಬಗಳು ಬೀದಿಗೆ ಬೀಳಲಿವೆ ಎಂದು ಪ್ರತಿಭಟನನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ರೈತರು ವ್ಯವಸಾಯ ಮಾಡುತ್ತಿರುವ ಭೂಮಿಗಳನ್ನು ನಿವೇಶನಗಳಾಗಿ ಪರಿವರ್ತಿಸಬಾರದು. ಬಗರ್ ಹುಕುಂ, ಅಕ್ರಮ ಸಕ್ರಮ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಭೂಮಿಗಾಗಿ ಅರ್ಜಿ ಹಾಕಿರುವ ಅರ್ಹ ರೈತರಿಗೆ ಕೂಡಲೇ ಜಮೀನು ಮಂಜೂರು ಮಾಡಿ, ಖಾತೆ, ಪಹಣಿ ಮಾಡಿಸಿಕೊಡಬೇಕು ಎಂದು ರೈತರು ಒತ್ತಾಯಿಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಕಚೇರಿ ಮುಂಭಾಗ ರಸ್ತೆ ತಡೆ ನಡೆಸಲಾಯಿತು.

ತಾಲ್ಲೂಕು ಘಟಕದ ಅಧ್ಯಕ್ಷ ಶಿವು, ನಡುಪನ್ನ, ನರಸಪ್ಪ, ಹನುಮಂತರಾಯಪ್ಪ, ವೆಂಕಟಸ್ವಾಮಿ, ಗೋಪಾಲ, ಸಿದ್ದಪ್ಪ, ಈಶ್ವರ, ಮಲ್ಲಣ್ಣ, ಸದಾಶಿವಪ್ಪ, ಪರಶುನಾಯ್ಕ, ರಾಮಾನಾಯ್ಕ, ಯೋಗಾನಾಯ್ಕ, ನಾರಾಯಣನಾಯ್ಕ, ರಾಜಣ್ಣ, ತಿಪ್ಪೇಸ್ವಾಮಿ, ವೀರಣ‍್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.