ಕುಣಿಗಲ್: ಪುರಸಭೆ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳು ಸ್ವಚ್ಛತೆ ಕಾರ್ಯನಿರ್ವಹಿಸಿದ ಕೂಲಿ ಕಾರ್ಮಿಕರು ತಮ್ಮ ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ಸೋಮವಾರ ಪುರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಪೌರಕಾರ್ಮಿಕ ಸಂಘದ ಅಧ್ಯಕ್ಷೆ ಸರಸಮ್ಮ, ಪುರಸಭೆ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ಹೆಚ್ಚಾದಾಗ ಅಧಿಕಾರಿಗಳು, ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ 45 ಕಾರ್ಮಿಕರನ್ನು ನೇಮಿಸಿಕೊಂಡು ದಿನವಹಿ ಹಾಜರಾತಿ ನಿರ್ವಹಿಸಿ ಮೂರು ತಿಂಗಳ ಕಾಲ ಕೆಲಸ ಮಾಡಿಸಿಕೊಂಡಿದ್ದರು. ಸೋಮವಾರ ವೇತನ ನೀಡುವಂತೆ ಪರಿಸರ ಎಂಜಿನಿಯರ್ ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿದಾಗ ಪುರಸಭೆಯಲ್ಲಿ ಯಾವುದೇ ದಾಖಲಾತಿ ಇಲ್ಲದ ಕಾರಣ ವೇತನ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಕಾರ್ಮಿಕರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದರು.
ಪುರಸಭೆ ಸದಸ್ಯ ಆನಂದ್ ಕಾಂಬ್ಳಿ, ಕೂಲಿ ಕೆಲಸದ ಆಸೆಯಿಂದ ಜಿಲ್ಲೆಯ ಮೂಲೆಗಳಿಂದ ಕಾರ್ಮಿಕರು ಬಂದು ಸತತವಾಗಿ ಮೂರು ತಿಂಗಳು ಪಟ್ಟಣದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಅಧಿಕಾರಿಗಳ ವರ್ತನೆಯಿಂದಾಗಿ ಮಾಡಿದ ಕೆಲಸಕ್ಕೆ ಕೂಲಿ ಇಲ್ಲದಂತಾಗಿದೆ ಎಂದರು.
ಪುರಸಭೆ ಮುಖ್ಯಾಧಿಕಾರಿ ಶಿವಪ್ರಸಾದ್, ಮಂಜೂರಾತಿ ನಿರೀಕ್ಷೆ ಮೇರೆಗೆ ಹೊರಗುತ್ತಿಗೆ ಆಧಾರದಲ್ಲಿ 24 ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕಾಗಿದೆ. 45 ಕಾರ್ಮಿಕರು ಕಾರ್ಯನಿರ್ವಹಿಸಿದ್ದಾರೆ. ಕಾನೂನು ತೊಡಕು ಇರುವುದರಿಂದ ಒಂದು ತಿಂಗಳ ವೇತನ ನೀಡುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.