ADVERTISEMENT

ಹಾಸ್ಟೆಲ್ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಿ

ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಯ ಆಯುಕ್ತ ಆರ್.ಎಸ್. ಪೆದ್ದಪ್ಪಯ್ಯ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 15:19 IST
Last Updated 6 ಫೆಬ್ರುವರಿ 2020, 15:19 IST
ತುಮಕೂರು ಜಿಲ್ಲಾ ಬಾಲಭವನದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಆರ್.ಎಸ್.ಪೆದ್ದಪ್ಪಯ್ಯ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ತುಮಕೂರು ಜಿಲ್ಲಾ ಬಾಲಭವನದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಆರ್.ಎಸ್.ಪೆದ್ದಪ್ಪಯ್ಯ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.   

ತುಮಕೂರು: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿರುವ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಶೇ 90ರಷ್ಟು ಹೆಚ್ಚಿಸಲು ಕ್ರಮ ವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಆರ್.ಎಸ್.ಪೆದ್ದಪ್ಪಯ್ಯ ಸೂಚಿಸಿದರು.

ಜಿಲ್ಲಾ ಬಾಲಭವನದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ನಿಲಯದ ಮೇಲ್ವಿಚಾರಕರು ಫಲಿತಾಂಶ ವೃದ್ಧಿಸುವ ನಿಟ್ಟಿನಲ್ಲಿ ಜಿಲ್ಲೆಯ ತುಮಕೂರು-1, ಚಿಕ್ಕನಾಯಕನಹಳ್ಳಿ-2, ಗುಬ್ಬಿ-1, ಕುಣಿಗಲ್-1, ಪಾವಗಡ-4, ಮಧುಗಿರಿ-1, ಕೊರಟಗೆರೆ-1, ತುರುವೇಕೆರೆ-1, ಶಿರಾ-3, ತಿಪಟೂರು-1 ತಾಲ್ಲೂಕು ಕೇಂದ್ರಗಳಲ್ಲಿ ಆಯ್ದ ವಿದ್ಯಾರ್ಥಿನಿಲಯಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಂದರಂತೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು. ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದರು.

ADVERTISEMENT

6 ರಿಂದ 9ನೇ ತರಗತಿಯಲ್ಲಿರುವ ಮಕ್ಕಳಿಗೆ ಪರೀಕ್ಷೆ ಸಮೀಪಿಸುತ್ತಿರುವುದರಿಂದ ತರಗತಿಗಳಿಗೆ, ತರಬೇತಿಗೆ ಗೈರುಹಾಜರಾಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಓದು-ಬರಹದಲ್ಲಿ ಗಮನ ಹರಿಸುವಂತೆ ವಿದ್ಯಾರ್ಥಿಗಳ ಜತೆಗಿದ್ದು ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಿಲಯದ ಮೇಲ್ವೀಚಾರಕರು ‘ಮಕ್ಕಳಿಗಾಗಿ ನಾನಿದ್ದೇನೆ–ನನಗಾಗಿ ಮಕ್ಕಳು ಇಲ್ಲ’ ಎಂಬ ಮನೋಭಾವ ರೂಢಿಸಿಕೊಂಡು ತಮ್ಮ ಕರ್ತವ್ಯವನ್ನು ಚಾಚೂ ತಪ್ಪದೇ ಮಾಡಬೇಕು. ನೋಡಲ್ ಅಧಿಕಾರಿಗಳು ಪರೀಕ್ಷಾ ಸಿದ್ಧತೆಯ ಬಗ್ಗೆ ಮೇಲ್ವಿಚಾರಣೆ ನಡೆಸಬೇಕು ಎಂದರು.

ಜಿಲ್ಲೆಯಲ್ಲಿ 100 ವಿದ್ಯಾರ್ಥಿನಿಲಯಗಳಿದ್ದು, ಎಲ್ಲಾ ವಿದ್ಯಾರ್ಥಿನಿಲಯಗಳಲ್ಲೂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಸುವಲ್ಲಿ ಇಲಾಖೆಯ ಎಲ್ಲಾ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು. ಅಲ್ಲದೆ, ವಿದ್ಯಾರ್ಥಿನಿಲಯಗಳ ಮೂಲ ಸೌಕರ್ಯಗಳನ್ನು ಒದಗಿಸಲು ಇಲಾಖೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಅನುದಾನ ಸಹ ನೀಡಲಿದೆ ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಬಿ.ಟಿ. ಮಂಜುನಾಥ್, ಜಂಟಿ ನಿರ್ದೇಶಕ ಎಚ್.ಎಸ್.ಪ್ರೇಮನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.