ADVERTISEMENT

ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ

ಪಾಲಿಕೆ ಆಯುಕ್ತೆ ರೇಣುಕಾ ಭರವಸೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 7:54 IST
Last Updated 21 ಜನವರಿ 2022, 7:54 IST
ತುಮಕೂರಿನಲ್ಲಿ ಗುರುವಾರ ಬೀದಿಬದಿ ವ್ಯಾಪಾರಿಗಳ ದಿನಾಚರಣೆ ನಡೆಯಿತು. ಪಾಲಿಕೆ ಆಯುಕ್ತೆ ರೇಣುಕಾ, ಪಾಲಿಕೆ ವಿರೋಧ ಪಕ್ಷದ ನಾಯಕ ಜೆ.ಕುಮಾರ್, ಸಾಮಾಜಿಕ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್ ಅಹಮದ್, ಸಿಐಟಿಯು ಮುಖಂಡ ಸೈಯದ್ ಮುಜೀಬ್, ಸ್ಲಂ ಜನಾಂದೋಲದ ಸಂಚಾಲಕ ನರಸಿಂಹಮೂರ್ತಿ, ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಮೊದಲಾದವರು ಉಪಸ್ಥಿತರಿದ್ದರು
ತುಮಕೂರಿನಲ್ಲಿ ಗುರುವಾರ ಬೀದಿಬದಿ ವ್ಯಾಪಾರಿಗಳ ದಿನಾಚರಣೆ ನಡೆಯಿತು. ಪಾಲಿಕೆ ಆಯುಕ್ತೆ ರೇಣುಕಾ, ಪಾಲಿಕೆ ವಿರೋಧ ಪಕ್ಷದ ನಾಯಕ ಜೆ.ಕುಮಾರ್, ಸಾಮಾಜಿಕ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್ ಅಹಮದ್, ಸಿಐಟಿಯು ಮುಖಂಡ ಸೈಯದ್ ಮುಜೀಬ್, ಸ್ಲಂ ಜನಾಂದೋಲದ ಸಂಚಾಲಕ ನರಸಿಂಹಮೂರ್ತಿ, ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಮೊದಲಾದವರು ಉಪಸ್ಥಿತರಿದ್ದರು   

ತುಮಕೂರು: ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದರ ಜತೆಗೆ ಪುನರ್ವಸತಿ ಕಲ್ಪಿಸಲು ಮಹಾನಗರ ಪಾಲಿಕೆ ಬದ್ಧವಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು.

ನಗರದಲ್ಲಿ ಗುರುವಾರ ನಡೆದ ಬೀದಿಬದಿ ವ್ಯಾಪಾರಿಗಳ ದಿನಾಚರಣೆ ಯಲ್ಲಿ ಮಾತನಾಡಿ, ‘ಬೀದಿಬದಿ ವ್ಯಾಪಾರಿಗಳಿಗಾಗಿ ಸ್ಮಾರ್ಟ್ ಸಿಟಿಯಿಂದ ದೆಹಲಿ ಮಾದರಿ ಯಲ್ಲಿ ಒಂದೊಂದು ಉತ್ಪನ್ನಕ್ಕೆ ಒಂದು ವ್ಯಾಪಾರಿ ವಲಯವನ್ನು ಗುರುತಿಸ ಲಾಗುವುದು. ಯಾವುದೇ ಕಾರಣಕ್ಕೂ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸುವುದಿಲ್ಲ’ ಎಂದು ಭರವಸೆ ನೀಡಿದರು.

ಪಾಲಿಕೆ ವಿರೋಧ ಪಕ್ಷದ ನಾಯಕ ಜೆ. ಕುಮಾರ್, ‘ಬೀದಿಬದಿ ವ್ಯಾಪಾರಿಗಳು ಕಷ್ಟ ಜೀವಿಗಳು. ಅವರ ಶ್ರಮ ಜೀವನವನ್ನು ಗೌರವಿಸಿ, ಹಕ್ಕುಗಳಿಗೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸಲಾಗುವುದು’ ಎಂದು ಹೇಳಿದರು.

ADVERTISEMENT

ಸಾಮಾಜಿಕ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್ ಅಹಮದ್, ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೀದಿಬದಿ ವ್ಯಾಪಾರಿಗಳು ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಿದರು.

ಸಿಐಟಿಯು ಮುಖಂಡ ಸೈಯದ್ ಮುಜೀಬ್, ‘ನಿರುದ್ಯೋಗದಿಂದ ಬಡತನ ದೂರವಾಗಿಸಲು ಜೀವನ ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸಲು ಕನಿಷ್ಠ 20 ವ್ಯಾಪಾರಿ ವಲಯವನ್ನು ಗುರುತಿಸಬೇಕು’ ಎಂದು ಪಾಲಿಕೆಗೆ ಮನವಿ ಮಾಡಿದರು.

ಡೇ ನೆಲಂ ಅಧಿಕಾರಿ ರಾಮಾಂಜಿನಪ್ಪ, ‘ಬೀದಿಬದಿ ವ್ಯಾಪಾರಿಗಳ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲಾತಿಗಳನ್ನು ನೀಡಿ ಗುರುತಿನ ಚೀಟಿ, ಪ್ರಮಾಣ ಪತ್ರ ಪಡೆಯಿರಿ’ ಎಂದರು.

ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ, ಸ್ಲಂ ಜನಾಂದೋಲನದ ಸಂಚಾಲಕ ನರಸಿಂಹಮೂರ್ತಿ ಮಾತನಾಡಿದರು. ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ವೆಂಡಿಂಗ್ ಕಮಿಟಿ ಸದಸ್ಯ ವಸೀಂ, ಎಚ್‌.ಕೆ. ರವಿಕುಮಾರ್, ಶ್ರೀಧರ್, ಜಗದೀಶ್, ಮುತ್ತರಾಜು, ಲಕ್ಷ್ಮಮ್ಮ, ಪಾರ್ವತಮ್ಮ, ಮುಮ್ತಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.