ತಿಪಟೂರು: ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ನಿಯಂತ್ರಿಸುವ ಸಲುವಾಗಿ ಔಷಧಿ ನೀಡಲಾಗುತ್ತಿದೆ. ಆದರೆ ಸೋಮವಾರ ಬೆಳಿಗ್ಗೆ ಅರವತ್ತಕ್ಕೂ ಹೆಚ್ಚು ಕೊರೊನಾ ಸೋಂಕಿತರ ಸಂಬಂಧಿಕರು ವೈದ್ಯರು ಬರೆದುಕೊಟ್ಟ ಚೀಟಿ ಹಿಡಿದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಕಾದುಕಾದು ಸುಸ್ತಾಗಿದ್ದಾರೆ.
ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೂ ಕೊರೊನಾ ಸೋಂಕಿತರ ಸಂಬಂಧಿಗಳು, ಹೋಂ ಕ್ವಾರಂಟೈನ್ ಇರುವವರಿಗೆ ಔಷಧಿ, ಮಾತ್ರೆ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ ಔಷಧಿ ವಿಭಾಗದಲ್ಲಿ ಔಷಧಿ ನೀಡುವವರು ಯಾರು ಇಲ್ಲದೆ ಇರುವ ಕಾರಣದಿಂದ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಸಾರ್ವಜನಿಕರು ಪರದಾಡುವಂತಾಯಿತು.
ಇತ್ತೀಚಿನ ದಿನಗಳಲ್ಲಿ ಈ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ 50 ಹಾಸಿಗೆಗೆ ಏರಿಸಿದರೂ ಔಷಧಿ ವಿಭಾಗದಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುವವರುಇಲ್ಲದಂತಾಗಿದ್ದಾರೆ. ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಜತೆಗೆ ಸಾವುಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿದ್ದರೂ ತಾಲ್ಲೂಕಿನಲ್ಲಿ ಆರೋಗ್ಯ ಇಲಾಖೆ ಕಾಳಜಿ ವಹಿಸುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಿ ಸಮರ್ಪಕವಾಗಿ ಔಷಧಿ ವಿತರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.