ಕುಣಿಗಲ್: ರಾಜ್ಯದ ಅನುದಾನ ರಹಿತ ಶಾಲೆಗಳ 3.5 ಲಕ್ಷ ಶಿಕ್ಷಕರಿಗೆ ಉಚಿತ ಚಿಕಿತ್ಸೆ ಪಡೆಯಲು ಆರೋಗ್ಯ ಕಾರ್ಡ್ಗಳನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ ತಿಳಿಸಿದರು.
ಪಟ್ಟಣದ ಗೌತಮ ಶಾಲೆಯಲ್ಲಿ ವೈ.ಎ. ನಾರಾಯಣ್ ಸ್ವಾಮಿ ಮತ್ತು ಚಿದಾನಂದ ಗೌಡ ಅಭಿಮಾನಿ ಬಳಗದಿಂದ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.
ಕೋವಿಡ್ ಸಂಕಷ್ಟ ಕಾಲದಲ್ಲಿ ಸಮಾಜದ ಎಲ್ಲ ವರ್ಗದವರಿಗೆ ಸರ್ಕಾರ ಪ್ಯಾಕೇಜ್ ನೀಡಿದೆ. ಆದರೆ ಅನುದಾನ ರಹಿತ ಶಾಲೆಗಳ ಶಿಕ್ಷಕರು, ಸಮಾಜದಿಂದ, ಪೋಷಕರಿಂದ ಮತ್ತು ಆಡಳಿತ ಮಂಡಳಿಗಳಿಂದ ಶೋಷಿತರಾಗಿದ್ದಾರೆ ಎಂದರು.
ಕೋವಿಡ್ ಮೂರನೇ ಅಲೆ ಬಗ್ಗೆ ಆತಂಕಗೊಳ್ಳದೆ ಆಗಸ್ಟ್ ಒಂದರಿಂದ ಶಾಲೆ ಕಾಲೇಜು ಪ್ರಾರಂಭಿಸಿ, ರಾಜ್ಯದ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಆಡಳಿತ ಮಂಡಳಿಗಳ ಸಭೆ ನಡೆಸಿ ಶಿಕ್ಷಕರ ಉದ್ಯೋಗ ಭದ್ರತೆ, ಕನಿಷ್ಠ ವೇತನ, ಪರಿಹಾರಕ್ಕೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ ಮಾತನಾಡಿ, ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳದ್ದು ಸಿಂಹಪಾಲಿದೆ. 27 ಸಾವಿರ ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಕಿ ಕೆಲವೇ ಶಿಕ್ಷಣ ಸಂಸ್ಥೆಗಳ ವ್ಯಾಪಾರಿಕರಣ ಧೋರಣೆಯಿಂದಾಗಿ ಕೆಟ್ಟ ಹೆಸರು ಬರುತ್ತಿದೆ ಎಂದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಡಿ.ಕೃಷ್ಣಕುಮಾರ್, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಕೆ.ಎಸ್.ಬಲರಾಂ, ಗೌತಮ ಶಾಲಾ ಸಂಸ್ಥೆಯ ರವಿಚಂದ್ರ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಕಾರ್ಯದರ್ಶಿ ನರಸಿಂಹಮೂರ್ತಿ, ನಿರ್ದೇಶಕ ನಾಗರಾಜು, ಬೆಂಗಳೂರು ಶಿವಾಜಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಶಿಕ್ಷಣಾಧಿಕಾರ ಧನಂಜಯ್ಯ, ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ಸಂಚಾಲಕ ಜಿ.ಡಿ.ಗಂಗಾಧರ್ ಮುಖಂಡರಾದ ಅರುಣ್, ಮಾಯಣ್ಣಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.