ADVERTISEMENT

ಕೃಷಿ ಸಮಸ್ಯೆ ನಿವಾರಣೆಗೆ ಆಗ್ರಹ

ರೈತ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2019, 20:10 IST
Last Updated 19 ಜನವರಿ 2019, 20:10 IST
ನಗರದ ಟೌನ್‌ಹಾಲ್‌ ವೃತ್ತದಲ್ಲಿ ರೈತ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು
ನಗರದ ಟೌನ್‌ಹಾಲ್‌ ವೃತ್ತದಲ್ಲಿ ರೈತ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು   

ತುಮಕೂರು: ಜಿಲ್ಲೆಯಲ್ಲಿ ಬರ ಮತ್ತು ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ರೈತ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಟೌನ್‌ಹಾಲ್‌ ವೃತ್ತದಲ್ಲಿ ಸಮಾವೇಶಗೊಂಡ ಎಲ್ಲಾ ಪ್ರತಿಭಟನಕಾರರು ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿಗೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು, ಜಿಲ್ಲೆಯಲ್ಲಿ ಬರದಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಸಿಗುತ್ತಿಲ್ಲ. ರೈತರು ಪರಿತ‍ಪಿಸುತ್ತಿದ್ದಾರೆ.ತುರ್ತಾಗಿ ಗೋಶಾಲೆಗಳನ್ನು ತೆರೆದು ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ADVERTISEMENT

ಹೇಮಾವತಿ ನಾಲೆಯ 25 ಟಿಎಂಸಿ ನೀರಿನ ಪಾಲಿನಲ್ಲಿ 15 ಟಿಎಂಸಿ ನೀರು ಹರಿಯುತ್ತಿದ್ದು ಲೆಕ್ಕದಲ್ಲಿ ಮಾತ್ರ ತೋರಿಸಲಾಗುತ್ತಿದೆ. ಪೂರ್ಣ ಪ್ರಮಾಣದಲ್ಲಿ ನೀರು ಹರಿಸಿ ಜಿಲ್ಲೆಯ ಕೆರೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿದರು.

‘ಕೃಷಿ ಮತ್ತು ಕೃಷಿಕರು ಬಿಕ್ಕಟ್ಟು ಎದುರಿಸುತ್ತಿದ್ದು, ರೈತರು ಕೃಷಿಗಾಗಿ ಹೂಡಿದ ಬಂಡವಾಳವೂ ಬಾರದೆ ಸಮಸ್ಯೆಗಳ ಸುಳಿಯಲ್ಲಿದ್ದಾರೆ. ಈ ಬಗ್ಗೆ ಗಮನಹರಿಸದ ರಾಜಕಾರಣಿಗಳು ರೆಸಾರ್ಟ್ ರಾಜಕೀಯದಲ್ಲಿ ತೊಡಗಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಆರೋಪಿಸಿದರು.

ಬೆಳೆಗಳ ಸಂರಕ್ಷಣೆಗಾಗಿ 1500 ಅಡಿ ಬೋರ್‌ವೆಲ್ ಕೊರೆದರೂ ನೀರು ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿ 3.5 ಲಕ್ಷ ಮಂದಿ ರೈತರು, ಕರ್ನಾಟಕದಲ್ಲಿ 19 ಸಾವಿರ, ಜಿಲ್ಲೆಯಲ್ಲಿ 100 ಕ್ಕೂ ಹೆಚ್ಚು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕಾರ್ಯದರ್ಶಿ ಬಿ.ಉಮೇಶ್, ಪ್ರಾಂತ ರೈತ ಸಂಘ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರೊ.ಕೆ.ದೊರೈರಾಜ್ ಮಾತನಾಡಿದರು.ಸಿಐಟಿಯು ಮುಖಂಡರಾದ ನೌಷಾದ್ ಸೆಹಗನ್, ಎನ್.ಕೆ.ಸುಬ್ರಮಣ್ಯ, ಖಲೀಲ್, ಶಂಕರಪ್ಪ, ಟಿ.ಎಂ.ಗೋವಿಂದರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.