ಶಿರಾ: ತಾಲ್ಲೂಕಿನ ಮರಡಿ ಗುಡ್ಡದ ಮರಡಿ ರಂಗನಾಥ ಸ್ವಾಮಿ ದೇವಸ್ಥಾನದ ತಪ್ಪಲಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಾ.ಅಂಬೇಡ್ಕರ್ ವಸತಿ ಶಾಲೆಯನ್ನು ಬೇರೆ ಕಡೆ ಸ್ಥಳಾಂತರಿಸಬಾರದು ಎಂದು ಒತ್ತಾಯಿಸಿ ಸೋಮವಾರ ಮಾನವ ಬಂಧುತ್ವ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ನಾಹಿದಾ ಜಮ್ ಜಮ್ ಅವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಕಟ್ಟಡದ ಕಾಮಗಾರಿ ಪ್ರಾರಭವಾಗಿದೆ. ಈ ಸಮಯದಲ್ಲಿ ದೇವಸ್ಥಾನ ಸಮಿತಿಯವರು ಹೊಸದುರ್ಗದ ಶಾಂತವೀರ ಸ್ವಾಮೀಜಿ ನೇತೃತ್ವದಲ್ಲಿ ವಸತಿ ಶಾಲೆಗೆ ವಿರೋಧ ವ್ಯಕ್ತಪಡಿಸಿ ಸ್ಥಳಾಂತರ ಮಾಡುವಂತೆ ಒತ್ತಾಯಿಸುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಜಾತಿಗಳ ಮಕ್ಕಳಿಗೆ ಇದರಿಂದ ಅನ್ಯಾಯವಾಗುವುದು. ಶಾಲೆ ಪ್ರಾರಂಭದಿಂದ ಇಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಪ್ರಶಾಂತವಾಗಿರುವ ವಾತಾವರಣದಲ್ಲಿ ಶಾಲೆ ಪ್ರಾರಂಭವಾದರೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹ ಅನುಕೂಲ ಆಗಲಿದೆ. ಯಾವುದೇ ಕಾರಣಕ್ಕೂ ವಸತಿ ಶಾಲೆಯನ್ನು ಸ್ಥಳಾಂತರ ಮಾಡದೆ ಅಲ್ಲಿಯೇ ಪ್ರಾರಂಭಿಸಬೇಕು ಎಂದು ತಹಶೀಲ್ದಾರ್ ನಾಹಿದಾ ಜಮ್ ಜಮ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಜೆ.ಎನ್.ರಾಜಸಿಂಹ, ಉಪನ್ಯಾಸಕ ಕೊಟ್ಟ ಶಂಕರ್, ಮಾನವ ಬಂಧುತ್ವ ವೇದಿಕೆ ತಾಲೂಕ ಸಂಚಾಲಕ ರಂಗರಾಜು, ಜಿಲ್ಲಾ ಸಂಯೋಜಕ ಧರಣಿ ಕುಮಾರ, ಬುಕ್ಕಾಪಟ್ಟಣ ಹೋಬಳಿ ವಾಲ್ಮೀಕಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಗಂಗಾಧರ್, ಶಿವು ಜಾನಕಲ್, ರಾಜೇಶ್, ವೇಣು, ಜಯರಾಮಕೃಷ್ಣ, ಶಾಂತಕುಮಾರ್, ಶಿವಕುಮಾರ್, ತಿಪ್ಪೇಸ್ವಾಮಿ, ಲಿಂಗೇಗೌಡ, ಆನಂದ, ಶಿವಣ್ಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.