ADVERTISEMENT

ನದಿ ಜೋಡಣೆ | ಕೇಂದ್ರಕ್ಕೆ ಮುಖ್ಯಮಂತ್ರಿ ಪ್ರಸ್ತಾವನೆ ಸಲ್ಲಿಸಲಿ: ಸಂಸದ ಬಸವರಾಜ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 6:53 IST
Last Updated 3 ಜೂನ್ 2019, 6:53 IST
   

ತುಮಕೂರು:ನದಿ ಜೋಡಣೆಯಿಂದ ರಾಜ್ಯದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಾಧ್ಯವಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿ ಎಂದು ಸಂಸದ ಜಿ.ಎಸ್.ಬಸವರಾಜ್ ಒತ್ತಾಯಿಸಿದರು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ನದಿ ಜೋಡಣೆ ಯೋಜನೆಯಡಿಯಲ್ಲಿ ದಕ್ಷಿಣ ಭಾರತ ನದಿ ಜೋಡಣೆ ಯೋಜನೆ ರೂಪಗೊಳ್ಳುತ್ತಿದೆ.ಸರ್ವ ಪಕ್ಷಗಳ ಸಭೆ, ರಾಜ್ಯದ ಸಂಸದರ ಸಭೆ ಕರೆಯಬೇಕು. ನೀರಾವರಿಗಾಗಿಯೇ ವಿಶೇಷ ಅಧಿವೇಶನ ನಡೆಸಬೇಕು ಎಂದು ಒತ್ತಾಯ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಲ ನೀತಿ ಪ್ರಕಾರಕುಡಿಯುವ ನೀರಿಗೆ ಮೊದಲ ಆದ್ಯತೆ. ನದಿ ನೀರಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಶಾಶ್ವತವಾದ, ಶುದ್ಧವಾದ ಕುಡಿಯುವ ನೀರು ಪೂರೈಕೆ ಮತ್ತು ಅಂತರ್ಜಲ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ ಎಂದರು.

ADVERTISEMENT

'ಊರಿಗೊಂದು ಕೆರೆ - ಆ ಕೆರೆಗೆ ನದಿ ನೀರು' ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿ ಮಾಡಬೇಕು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ 2019- 2020ನೇ ಸಾಲಿನ ಮುಂಗಡ ಪತ್ರದಲ್ಲಿ ಯೋಜನೆ ಸೇರ್ಪಡೆ ಮಾಡಿ ಮಂಜೂರು ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದರು.

ಜಲ ಸಮಾವೇಶ

ಕೇಂದ್ರ ಜಲಶಕ್ತಿ ಸಚಿವಾಲಯದ ಸಚಿವ ಗಜೇಂದ್ರ ಶೇಖಾವತ್ ಅವರನ್ನು ತುಮಕೂರಿಗೆ ಕರೆಸಲಾಗುವುದು.ನೀರಾವರಿ ಯೋಜನೆ ಜಾರಿಗೆ ರಾಜ್ಯಮಟ್ಟದ ಬೃಹತ್ ಸಮಾವೇಶ ನಡೆಸಲಾಗುವುದು. ರಾಜ್ಯದ ಸರ್ವಧರ್ಮ ಮಠಾಧೀಶರು ಸಮಾವೇಶದಲ್ಲಿ ಭಾಗವಹಿಸುವರು. ಈಗಾಗಲೇ ಮಠಾಧೀಶರೊಂದಿಗೆ ಸಮಾಲೋಚನೆ ಮಾಡಲಾಗಿದೆ ಎಂದು ವಿವರಿಸಿದರು.

ಎಸ್.ಎಂ. ಕೃಷ್ಣ ನೇತೃತ್ವದಲ್ಲಿ ಸಭೆ

ಎಸ್.ಎಂ. ಕೃಷ್ಣಮುಖ್ಯಮಂತ್ರಿ ಆಗಿದ್ದಾಗ ನೀರಾವರಿ ತಜ್ಞ ಜಿ.ಎಸ್. ಪರಮಶಿವಯ್ಯ ವರದಿ ಅನುಷ್ಠಾನಕ್ಕೆ ಚಾಲನೆ ನೀಡಿದರು. ಅದರ ಪರಿಣಾಮ ಇಂದು ಎತ್ತಿನ ಹೊಳೆ ಯೋಜನೆ ಜಾರಿಗೆ ಬಂದಿದೆ. ಅದ್ದರಿಂದ ನದಿ ಜೋಡಣೆ ಬಗ್ಗೆ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ತಾಂತ್ರಿಕ ಪರಿಣಿತರ ಸಭೆ ನಡೆಸಲು ಚಿಂತನೆ ಮಾಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.