ತಿಪಟೂರು: ‘ಮಲಹೊರುವ ಪದ್ಧತಿ ಕಾನೂನುಬಾಹಿರ ಹಾಗೂ ಅಮಾನವೀಯವಾದುದು. ಮಲಹೊರುವ ಕೆಲಸ ಮಾಡುವುದು ಮತ್ತು ಪ್ರೋತ್ಸಾಹಿಸುವ ಕೆಲಸ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ’ ಎಂದು ತಹಶೀಲ್ದಾರ್ ಚಂದ್ರಶೇಖರ್ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಮುಂಭಾಗ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ, ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ಸಹಯೋಗದಡಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ ವಸತಿ ಕಾಯ್ದೆ 2020ರ ಜಿಲ್ಲಾ ಮಟ್ಟದ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಿಂದೆ ಇಂತಹ ಪದ್ಧತಿ ಆಚರಣೆಯಲ್ಲಿತ್ತು. ಆದರೆ ಕಾಲ ಬದಲಾದಂತೆ ಪದ್ಧತಿಯೂ ಬದಲಾಗಿದ್ದು ಸರ್ಕಾರವೇ ನಿಷೇಧ ಹೇರಿದೆ. ಆದರೂ ಬಹಳ ಹಿಂದುಳಿದಿರುವ ಕಡೆಗಳಲ್ಲಿ ಇಂತಹ ಪ್ರಕರಣಗಳು ಕಂಡುಬರುತ್ತಿರುವುದು ಬೇಸರದ ಸಂಗತಿ. ಇಂತಹ ಹೀನ ಕೆಲಸ ಮಾಡುವುದು ಅಪರಾಧ. ಅಲ್ಲದೆ ಈ ಕೆಲಸಕ್ಕೆ ಪ್ರೋತ್ಸಾಹಿಸುವುದು ಕೂಡ ಅಪರಾಧವಾಗಿದೆ. ಇಂತಹ ಪ್ರಕರಣಗಳು ಕಂಡುಬಂದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಓಬಳೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್, ತಾಲ್ಲೂಕು ಪೌರಕಾರ್ಮಿಕ ಸಂಘದ ಅಧ್ಯಕ್ಷ ಈಡೇನಹಳ್ಳಿ ಕಾಂತರಾಜು, ನಗರಸಭೆಯ ಆರೋಗ್ಯ ಅಧಿಕಾರಿ ಗಂಗಾಧರ್, ಶ್ರೀನಿವಾಸ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.