ADVERTISEMENT

ಜಿಲ್ಲಾ ಬಿಜೆಪಿಯಲ್ಲಿ ಸಂಚಲನ; ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್‍

​ಪ್ರಜಾವಾಣಿ ವಾರ್ತೆ
Published 31 ಮೇ 2020, 2:15 IST
Last Updated 31 ಮೇ 2020, 2:15 IST
ಎನ್.ಆರ್.ಸಂತೋಷ್‍
ಎನ್.ಆರ್.ಸಂತೋಷ್‍   

ತುಮಕೂರು: ಎನ್.ಆರ್.ಸಂತೋಷ್‍ ಅವರನ್ನು ರಾಜ್ಯ ಸಚಿವ ದರ್ಜೆಯ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದ್ದು, ಇದು ಜಿಲ್ಲಾ ಬಿಜೆಪಿಯಲ್ಲಿ ಮತ್ತು ಕಾರ್ಯಕರ್ತರಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಬಿಜೆಪಿ ಸರ್ಕಾರ ರಚನೆಯಾದ ನಂತರ ಜೆ.ಸಿ.ಮಾಧುಸ್ವಾಮಿ ಅವರು ಸಚಿವರಾದರು. ಇದನ್ನು ಹೊರತುಪಡಿಸಿ ಸರ್ಕಾರದ ಮಟ್ಟದಲ್ಲಿ ಜಿಲ್ಲೆಗೆ ಯಾವುದೇ ಪ್ರಾತಿನಿಧ್ಯಗಳು ಸಹ ದೊರೆತಿಲ್ಲ. ಹಿರಿಯ ಮುಖಂಡರು ಅಥವಾ ಕಾರ್ಯಕರ್ತರಿಗೂ ನಿಗಮ ಮಂಡಳಿಯ ಅಧ್ಯಕ್ಷ ಹುದ್ದೆಗಳು ದಕ್ಕಿಲ್ಲ. ಇಂತಹ ಸನ್ನಿವೇಶದಲ್ಲಿ ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ಗ್ರಾಮದ ಸಂತೋಷ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗುವ ಮೂಲಕ ಹಲವರ ಹೆಬ್ಬೇರುವಂತೆ ಆಗಿದೆ.

ಸಂತೋಷ್, ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದರು. ಅಲ್ಲದೆ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದು ಇತಿಹಾಸ. ನಂತರದ ಬೆಳವಣಿಗೆಯಲ್ಲಿ ಯಡಿಯೂರಪ್ಪ ಅವರ ಕುಟುಂಬದ ಜತೆ ಅವರ ಬಾಂಧವ್ಯ ಹಳಸಿತ್ತು ಎನ್ನಲಾಗುತ್ತದೆ. ಹೀಗೆ ಹಗ್ಗ ಜಗ್ಗಾಟದ ನಡುವೆಯೇ ಅವರಿಗೆ ಅದೃಷ್ಟ ಖುಲಾಯಿಸಿದೆ.

ADVERTISEMENT

ಜಿಲ್ಲಾ ರಾಜಕಾರಣ ಇಲ್ಲವೆ ತಿಪಟೂರು ರಾಜಕಾರಣದಲ್ಲಿ ಸಂತೋಷ್ ‘ಪ್ರಭಾವ’ ಬೀರುವರೇ ಎನ್ನುವ ವಿಚಾರ ಬಿಜೆಪಿ ಆಂತರಿಕ ವಲಯದಲ್ಲಿ ಚಾಲ್ತಿಯಲ್ಲಿದೆ. ಭವಿಷ್ಯದಲ್ಲಿ ತಿಪಟೂರು ಕ್ಷೇತ್ರದ ನಾಯಕ ಎಂದೇ ಸಂತೋಷ್ ಹಿತೈಷಿಗಳು ಅವರನ್ನು ಘೋಷಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿಬಿಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.