ತುಮಕೂರು: ಹೇಮಾವತಿ ನೀರು ಜಿಲ್ಲೆ ಹಾಗೂ ತಾಲ್ಲೂಕಿಗೆ ಸರಾಗವಾಗಿ ಹರಿಯುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರ ಸಹಕಾರ ಇದಕ್ಕಿದೆ. ಎಲ್ಲರ ಸಹಕಾರದಿಂದ ಶಿರಾಕ್ಕೆ ನೀರು ಮುಟ್ಟಿದೆ. ಕಳ್ಳಂಬೆಳ್ಳ, ಶಿರಾ ಕೆರೆ ತುಂಬಿಸಲಾಗುವುದು ಎಂದು ಶಾಸಕ ಬಿ.ಸತ್ಯನಾರಾಯಣ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೊದಲೂರು ಕೆರೆಗೂ ನೀರು ಹರಿಸುವ ಚಿಂತನೆ ಇದೆ. ಶಿರಾ ತಾಲ್ಲೂಕಿನ ಮುಕ್ಕಾಲು ಭಾಗ ಮಳೆ ಆಗಿದೆ. ಇದರಿಂದ ಅಂತರ್ಜಲ ಹೆಚ್ಚುತ್ತಿದೆ. ನೀರಿನ ಸಮಸ್ಯೆ ದೂರವಾಗುತ್ತದೆ’ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ತಾಲ್ಲೂಕಿಗೆ ಮಂಜೂರು ಮಾಡಿದ್ದರು. ಆ ಕಾಮಗಾರಿಗಳನ್ನು ಮುಂದುವರಿಸುತ್ತಿದ್ದೇವೆ. ಪ್ರತಿ ದಿನವೂ ಒಂದಲ್ಲಾ ಒಂದು ಕಾಮಗಾರಿಗೆ ಶಂಕುಸ್ಥಾಪನೆ ನಡೆಯುತ್ತಿದೆ. ಇತ್ತೀಚೆಗೆ 30ರಿಂದ 35 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ವ್ಯವಸ್ಥಿತವಾಗಿ ಕೆಲಸಗಳು ಆಗುತ್ತಿವೆ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.