ADVERTISEMENT

ತಾನು ಕಳ್ಳ ಪರರ ನಂಬ; ಸಿದ್ದರಾಮಯ್ಯ ವಿರುದ್ಧ ಸವದಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 11:40 IST
Last Updated 23 ಅಕ್ಟೋಬರ್ 2020, 11:40 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ತುಮಕೂರು: ಕಾಂಗ್ರೆಸ್‌ನಲ್ಲಿಯೇ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣಗಳು ಇವೆ. ಅವರಲ್ಲಿಯೇ ಒಗ್ಗಟ್ಟು ಇಲ್ಲ. ಹೀಗಿರುವಾಗ ಸಿದ್ದರಾಮಯ್ಯ ಬಿಜೆಪಿ ಟೀಕಿಸುತ್ತಿದ್ದಾರೆ. ಕಳ್ಳ ಪರರ ನಂಬ ಎನ್ನುವ ಸ್ಥಿತಿ ಅವರದ್ದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿಯೇ ಹೊಂದಾಣಿಕೆ ಕೊರತೆ ಇದೆ ಎಂದರು.

ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯ ಅವರ ವೈಯಕ್ತಿಕ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು.

ADVERTISEMENT

ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿಯೇ ಸಾಧಿಸುತ್ತದೆ. ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಪರಿಷತ್‌ನಲ್ಲಿ ಬಲ ಹೆಚ್ಚಿಸಿಕೊಳ್ಳಲಿದೆ. ಚುನಾವಣೆಯಲ್ಲಿ ಬಿಜೆಪಿ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಹಾಲನೂರು ಲೇಪಾಕ್ಷ ಮತ್ತು ಡಿ.ಟಿ.ಶ್ರೀನಿವಾಸ್ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಬಗ್ಗೆ ಹೆಚ್ಚು ಪ್ರತಿಕ್ರಿಯಿಸಿದ ಅವರು, ‘ಅವರು ಪಕ್ಷದ ಸದಸ್ಯರಲ್ಲ’ ಎಂದರು. ನಂತರ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಮತ್ತು ರೈತಪರ ಆಡಳಿತ, ಹಿಂದುಳಿದವರು, ಪರಿಶಿಷ್ಟ ಸಮುದಾಯಗಳಿಗೆ ನೀಡಿರುವ ಕಾರ್ಯಗಳು ಬಿಜೆಪಿ ಕೈಹಿಡಿಯಲಿವೆ. ಉಂಡೆ ಕೊಬ್ಬರಿ, ಶೇಂಗಾ, ಭತ್ತ ಸೇರಿದಂತೆ ರೈತರ ಉತ್ಪನ್ನಗಳಿಗೆ ಸರ್ಕಾರವು ಬೆಂಬಲ ಬೆಲೆ ನೀಡಿದೆ. ಕೊರೊನಾ ಸಂದರ್ಭದಲ್ಲಿಯೂ ಸರ್ಕಾರಿ ನೌಕರರ ಸಂಬಳ ಕಡಿತ ಮಾಡಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.