
ತುಮಕೂರು: ಸರ್ಕಾರದ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಸವಿತಾ ಸಮಾಜದವರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಇಲ್ಲಿ ಮಂಗಳವಾರ ಸಲಹೆ ಮಾಡಿದರು.
ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸವಿತಾ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯಾವುದೇ ಸಮಾಜ ಅಭಿವೃದ್ಧಿ ಆಗಬೇಕಾದರೆ ಒಗ್ಗಟ್ಟು ಅತಿ ಮುಖ್ಯ. ಸವಿತಾ ಸಮಾಜದ ಯುವಜನತೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರಲು ಸಮಾಜದ ಹಿರಿಯರು ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ‘ಸವಿತಾ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕೇಂದ್ರದ ವಿಶ್ವಕರ್ಮ ಯೋಜನೆಗಳ ಅಡಿಯಲ್ಲಿ ದೊರೆಯುವ ಸವಲತ್ತುಗಳನ್ನು ಪಡೆದು, ಮುಖ್ಯವಾಹಿನಿಗೆ ಬರಬೇಕು’ ಎಂದು ತಿಳಿಸಿದರು.
ಜಿಲ್ಲಾ ಸವಿತಾ ಸಮಾಜ ಅಧ್ಯಕ್ಷ ಮಂಜೇಶ್, ‘ಕುಲಕಸುಬಿನ ಜತೆಯಲ್ಲೇ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ವಿನ್ಯಾಸದ ಬ್ಯೂಟಿಷಿಯನ್ಗಳಾಗಿ ಹೇಗೆ ರೂಪಾಂತರ ಹೊಂದಬೇಕು ಎಂಬ ಬಗ್ಗೆ ಹಲವರು ತರಬೇತಿಗಳನ್ನು ನೀಡಲಾಗುತ್ತಿದೆ. ಈಗಾಗಲೇ ಸವಿತಾ ಸಮಾಜ ಭವನ ನಿರ್ಮಾಣ ಮಾಡಲಾಗಿದೆ’ ಎಂದು ಹೇಳಿದರು.
ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷ ಕಟ್ವೆಲ್ ರಂಗನಾಥ, ‘ನಮ್ಮಲ್ಲಿಯೂ ವಿದ್ಯಾವಂತರಿದ್ದಾರೆ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬೇಕು’ ಎಂಬ ಆಶಯ ವ್ಯಕ್ತಪಡಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ‘ಶರಣರು ದುಡಿಮೆಯೇ ದೇವರೆಂದು ನಂಬಿದ್ದವರು. ಅಂದು ದುಡಿಮೆಗಾಗಿ ಕೈಗೊಂಡ ವೃತ್ತಿಗಳೇ ಇಂದು ಜಾತಿಗಳಾಗಿ ಪರಿವರ್ತನೆಯಾಗಿವೆ. ಶರಣರ ಪ್ರಕಾರ ಯಾವ ವೃತ್ತಿಯಲ್ಲೂ ಮೇಲು–ಕೀಳು ಎಂಬುದಿಲ್ಲ’ ಎಂದರು.
ಮುಖಂಡ ಸ್ವದೇಶಿ ವಿಶ್ವಣ್ಣ, ಸವಿತಾ ಮಹರ್ಷಿ ಕುರಿತು ಉಪನ್ಯಾಸ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಅಶ್ವತ್ಥನಾರಾಯಣ, ಸಮುದಾಯದ ಮುಖಂಡರಾದ ಎನ್.ಸುಬ್ರಮಣ್ಯ, ಶಿವಣ್ಣ, ಡೋಲು ವಿದ್ವಾನ್ ಎಚ್.ಜಿ.ಶಿವಶಂಕರ್, ಬ್ಯೂಟಿಷಿಯನ್ ಎನ್.ಮಂಜುಳಾ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳಾದ ಕೆ.ವಿ.ನಾರಾಯಣ್, ಎಸ್.ಸುರೇಶ್, ಬಿ.ಗಂಗಾಧರ್, ಬಿ.ಎಸ್.ಪಾರ್ಥಸಾರಥಿ, ಟಿ.ಆರ್.ಮೇಲಾಕ್ಷಪ್ಪ, ಸಿ.ಆರ್.ಚೈತನ್ಯಕುಮಾರಿ, ಬಿ.ವಿ.ದಾಸರಾಜು, ಸತ್ಯನಾರಾಯಣ, ವಿ.ಲಲಿತಮ್ಮ, ಟಿ.ವಿ.ಸೀತಾರಾಮಯ್ಯ, ಕೆ.ಸಿ.ವರದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.