ADVERTISEMENT

ತುಮಕೂರು | ಸಿದ್ಧಗಂಗಾ ಮಠದ ವಿದ್ಯಾರ್ಥಿಗೆ ಕೊರೊನಾ ಶಂಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 15:40 IST
Last Updated 19 ಜೂನ್ 2020, 15:40 IST

ತುಮಕೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಇಲ್ಲಿನ ಸಿದ್ಧಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೊಲೇಷನ್‌ನಲ್ಲಿ ಇರಿಸಲಾಗಿದೆ.

ಆಂಧ್ರಪ್ರದೇಶದ ಕರ್ನೂಲ್ ಮೂಲದ ಈ ವಿದ್ಯಾರ್ಥಿ ರಾಯಚೂರು ಮೂಲಕ ಜೂ.15ಕ್ಕೆ ಮಠಕ್ಕೆ ಬಂದಿದ್ದ. ಆತನಲ್ಲಿ ಯಾವುದೇ ರೋಗಲಕ್ಷಣಗಳು ಕಂಡು ಬಂದಿರಲಿಲ್ಲ. ಕರ್ನೂಲ್ ಜಿಲ್ಲಾಡಳಿತ ವಿದ್ಯಾರ್ಥಿಗೆ ಸೋಂಕು ತಗುಲಿರುವ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಮಠಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ದರು. ಗಂಟಲು ಸ್ರಾವ ಮತ್ತು ಕಫದ ಮಾದರಿಯ ಪರೀಕ್ಷೆ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಈತನ ಜತೆ ಕೊಠಡಿಯಲ್ಲಿ ಇದ್ದ ಮೂವರು ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ವಿದ್ಯಾರ್ಥಿ ಶಿವಕುಮಾರ ಸ್ವಾಮೀಜಿ ಶತಮಾನೋತ್ಸವ ಭವನದಲ್ಲಿ ಕುಳಿತು ಎಲ್ಲ ಮಕ್ಕಳ ಜತೆ ಊಟ ಮಾಡಿದ್ದಾನೆ. ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಮಠದಲ್ಲಿ ಆತಂಕ ಹೆಚ್ಚಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.