ADVERTISEMENT

ಶಿರಾ: ಚುನಾವಣೆ ಘೋಷಣೆ ಮುನ್ನವೇ ಬಿಜೆಪಿ ಪ್ರಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 7:33 IST
Last Updated 5 ಸೆಪ್ಟೆಂಬರ್ 2020, 7:33 IST
ಶಿರಾ ತಾಲ್ಲೂಕಿನ ಶಿವನಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು
ಶಿರಾ ತಾಲ್ಲೂಕಿನ ಶಿವನಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು   

ಶಿರಾ: ಉಪಚುನಾವಣೆಯ ಘೋಷಣೆಗೆ ಮೊದಲೇ ಬಿಜೆಪಿ ಚುನಾವಣೆ ಪ್ರಚಾರ ಆರಂಭಿಸಿದೆ.

ಶಾಸಕರಾಗಿದ್ದ ಬಿ.ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನ ಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌ಗಿಂತ ಮೊದಲೇ ಬಿಜೆಪಿ ಸಂಘಟನೆ ಗಟ್ಟಿ ಮಾಡಿಕೊಳ್ಳುವಲ್ಲಿ ನಿರತವಾಗಿದೆ. ಅಭ್ಯರ್ಥಿ ಹೆಸರನ್ನು ಘೋಷಿಸದಿದ್ದರೂ, ಸಾಮೂಹಿಕವಾಗಿ ಪ್ರಚಾರ ಆರಂಭಿಸಿದ್ದಾರೆ.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ನೇತೃತ್ವದಲ್ಲಿ ಬೂತ್ ಸಮಿತಿಗಳ ರಚನೆ ನಡೆಯುತ್ತಿದೆ. ಕಸಬಾ ಹಾಗೂ ಗೌಡಗೆರೆ ಹೋಬಳಿಗಳಲ್ಲಿ ನಾಯಕರು ಸಂಚರಿಸುತ್ತಿದ್ದಾರೆ. ಮುಖಂಡ ಸೊಗಡು ಶಿವಣ್ಣ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಜತೆಯಾಗಿದ್ದಾರೆ. ಶಾಸಕ ಜ್ಯೋತಿಗಣೇಶ್, ರೈತ ಮೊರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್‌ ಸಹ ಪ್ರಚಾರದಲ್ಲಿ ಸಕ್ರಿಯರಾಗಿ
ದ್ದಾರೆ.

ADVERTISEMENT

ಬಿಜೆಪಿ ತಾಲ್ಲೂಕು ಘಟಕದಲ್ಲಿನ ಭಿನ್ನಮತಕ್ಕೆ ಇತಿಶ್ರೀ ಹಾಡುವ ಮೂಲಕ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್ ಹಾಗೂ ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಅವರನ್ನು ಜತೆಯಲ್ಲಿ ಕರೆದುಕೊಂಡು ಹೋಗುತ್ತಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ.

ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರೆ, ಜೆಡಿಎಸ್‌ನಲ್ಲಿ ಅಭ್ಯರ್ಥಿ ಯಾರು ಎನ್ನುವ ಗೊಂದಲ ಮುಂದುವರೆದಿದೆ. ಕಾಂಗ್ರೆಸ್‌ನಲ್ಲಿ ಮಾಜಿ ಶಾಸಕ ಕೆ.ಎನ್. ರಾಜಣ್ಣ ‘ನಾನೂ ಆಕಾಂಕ್ಷಿ’ ಎಂದು ಘೋಷಿಸಿಕೊಂಡರೂ, ಆ ಬಗ್ಗೆ ತಲೆ ಕೆಡಿಸಿಕೊಳ್ಳದ ಟಿ.ಬಿ.ಜಯಚಂದ್ರ ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕಲ್ಕೆರೆ ರವಿಕುಮಾರ್ ದಿನಸಿ ಕಿಟ್ ವಿತರಣೆಯಲ್ಲಿ ನಿರತರಾಗಿದ್ದಾರೆ. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದ ಡಾ.ಸಿ.ಎಂ.ರಾಜೇಶ್ ಗೌಡ ತಮ್ಮ ಅಭಿಮಾನಿಗಳ ಮೂಲಕ ದಿನಸಿ ಕಿಟ್ ವಿತರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.