ADVERTISEMENT

ಶಿರಾ: ಚರ್ಚೆಗೆ ಗ್ರಾಸವಾದ ಯುವ ಕಾಂಗ್ರೆಸ್ ಅಧ್ಯಕ್ಷ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 5:43 IST
Last Updated 26 ಡಿಸೆಂಬರ್ 2025, 5:43 IST
<div class="paragraphs"><p>ಕಾಂಗ್ರೆಸ್</p></div>

ಕಾಂಗ್ರೆಸ್

   

ಶಿರಾ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನರೇಶ್ ಗೌಡ ಅವರನ್ನು ನೇಮಕ ಮಾಡುವಂತೆ ಯುವ ಕಾಂಗ್ರೆಸ್ ಅಧ್ಯಕ್ಷರು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಒತ್ತಾಯ ತಾಲ್ಲೂಕಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಶಾಸಕ ಟಿ.ಬಿ‌.ಜಯಚಂದ್ರ ಅವರನ್ನು ಸಚಿವರನ್ನಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಕುಂಚಿಟಿಗರ ಸಂಘ ಹಾಗೂ ವಿವಿಧ ಸಂಘಟನೆಗಳು ನಡೆಸಿದ ಪಂಜಿನ ಮೆರವಣಿಗೆಯಲ್ಲಿ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಅಂಜನ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಹೇಮಂತ್ ಗೌಡ ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಣಿಕಂಠ ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಕಸಿವಿಸಿ ಮೂಡಿಸಿದೆ.

ADVERTISEMENT

ಪಂಜಿನ ಮೆರವಣಿಗೆ ಜಯಚಂದ್ರ ಅವರನ್ನು ಸಚಿವರನ್ನಾಗಿ ಮಾಡಲು ನಡೆಸಲಾಯಿತೋ ಅಥವಾ ನರೇಶ್ ಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಹೈಕಮಾಂಡ್ ಮೇಲೆ ಒತ್ತಡ ತರಲು ನಡೆಸಿದರೆ ಎನ್ನುವ ಪ್ರಶ್ನೆ ಕಾಂಗ್ರೆಸ್ ಕಾರ್ಯಕರ್ತರನ್ನು ಕಾಡುವಂತಾಗಿದೆ.

ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾಗಿ ಪಿ.ಆರ್.ಮಂಜುನಾಥ್ ಹಾಗೂ ಗ್ರಾಮಾಂತರ ಅಧ್ಯಕ್ಷರಾಗಿ ಬರಗೂರು ನಟರಾಜು ಅವರಿದ್ದು ಈಗ ಅವರನ್ನು ಬದಲಾಯಿಸುವ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ನರೇಶ್ ಗೌಡ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡುವಂತೆ ಯುವ ಕಾಂಗ್ರೆಸ್ ಅಧ್ಯಕ್ಷರು ಮಾಡಿರುವ ಒತ್ತಾಯ ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಪಕ್ಷದ ಅಂತರಿಕ ವಿಚಾರ ಅದನ್ನು ಪಕ್ಷದ ವೇದಿಕೆಯಲ್ಲಿ ಹಿರಿಯ ನಾಯಕರು ಚರ್ಚೆ ಮಾಡುತ್ತಾರೆ. ಜೊತೆಗೆ ಪಕ್ಷಕ್ಕೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಕೆಲಸವನ್ನು ಪಕ್ಷದ ಹೈಕಮಾಂಡ್ ಮಾಡುವುದು. ಅದನ್ನು ಬಿಟ್ಟು ಯುವ ಕಾಂಗ್ರೆಸ್ ಅಧ್ಯಕ್ಷರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸಾಮಾಜಿಕ‌ ಜಾಲತಾಣಗಳಲ್ಲಿ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ವರ್ಚಸ್ಸು ಕುಂದಿಸುತ್ತಿದ್ದಾರೆ ಎನ್ನುವ ದೂರು ತಾಲ್ಲೂಕಿನ ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ.

ಯುವ ಕಾಂಗ್ರೆಸ್ ಅಧ್ಯಕ್ಷರು ಪಕ್ಷವನ್ನು ಸಂಘಟಿಸುವ ಬದಲು ಹಿರಿಯ ನಾಯಕರನ್ನು ಬದಲಿಸಿ ಯುವ ನಾಯಕ ನರೇಶ್ ಗೌಡಗೆ ಅಧ್ಯಕ್ಷ ಸ್ಥಾನ ಕೇಳುವ ಮೂಲಕ‌ ಪಕ್ಷದಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. 50 ವರ್ಷಗಳ ರಾಜಕೀಯ ಅನುಭವವಿರುವ ಶಾಸಕ ಟಿ.ಬಿ.ಜಯಚಂದ್ರ ಅವರು ಸಹ ಚುನಾವಣೆ ಸಮಯದಲ್ಲಿ ಪಕ್ಷಕ್ಕಾಗಿ ದುಡಿದ ಹಿರಿಯ ಮತ್ತು ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಿರುವುದು ನೋವಿನ ಸಂಗತಿ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರು ನೋವು ತೋಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.