ಕಾಂಗ್ರೆಸ್
ಶಿರಾ: ಯುವ ಕಾಂಗ್ರೆಸ್ ಶಿರಾ ಘಟಕದ ಅಧ್ಯಕ್ಷರು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಕಾರಣ ಕೇಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನೋಟಿಸ್ ಜಾರಿ ಮಾಡಿದ್ದಾರೆ.
ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಂಜನ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಹೇಮಂತ್ ಗೌಡ ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಣಿಕಂಠ ಅವರಿಗೆ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಿ.ಆರ್.ಮಂಜುನಾಥ್ ಹಾಗೂ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬರಗೂರು ನಟರಾಜು ನೋಟಿಸ್ ಜಾರಿ ಮಾಡಿದ್ದು ಏಳು ದಿನದೊಳಗೆ ಸಮರ್ಪಕ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಶಾಸಕ ಟಿ.ಬಿ.ಜಯಚಂದ್ರ ಅವರನ್ನು ಸಚಿವರನ್ನಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಇತ್ತೀಚೆಗೆ ಶಿರಾದಲ್ಲಿ ಕುಂಚಿಟಿಗರ ಸಂಘದಿಂದ ನಡೆದ ಪಂಜಿನ ಮೆರವಣಿಗೆಯಲ್ಲಿ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಅಂಜನ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಹೇಮಂತ್ ಗೌಡ ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಣಿಕಂಠ ಅವರು ನರೇಶ್ ಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡುವಂತೆ ನೀಡಿದ್ದ ಹೇಳಿಕೆಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮದಲ್ಲಿ ಪ್ರಕಟವಾಗಿ ಕಾಂಗ್ರೆಸ್ನಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.
ಇದರಿಂದ ಪಕ್ಷಕ್ಕೆ ಆಗಿದ್ದ ಹಾನಿ ತಡೆಯುವ ಉದ್ದೇಶದಿಂದ ನೋಟಿಸ್ ನೀಡಲಾಗಿದೆ ಎಂದು ಪಕ್ಷದಲ್ಲಿ ಚರ್ಚೆಯಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.