ತುಮಕೂರು: ತಾಲ್ಲೂಕಿನ ಸಿರಿವರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ವಿಜ್ಞಾನ ಪ್ರಯೋಗ ಶಾಲೆಯನ್ನು ಶಾಸಕ ಡಿ.ಸಿ.ಗೌರಿಶಂಕರ್ ಉದ್ಘಾಟಿಸಿದರು.
‘ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಹೆಚ್ಚು ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಶಾಸಕ ಗೌರಿಶಂಕರ್ ಹೇಳಿದರು.
’ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಈಗಾಗಲೇ ಕಣಕುಪ್ಪೆ, ಬೆಳ್ಳಾವಿ ಕಾಲೇಜುಗಳಿಗೆ ಅನುದಾನ ನೀಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಹೆಬ್ಬೂರಿನ ಸರ್ಕಾರಿ ಪದವಿ ಕಾಲಜೂ ಅಭಿವೃದ್ಧಿ ಹೊಂದುತ್ತಿದೆ’ ಎಂದರು.
’ಸಿರಿವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಮಗ್ರ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.
’ಸಿರಿವರ ಪದವಿಪೂರ್ವ ಕಾಲೇಜಿನ(ಪ್ರೌಢಶಾಲಾ ವಿಭಾಗದ) ಮಕ್ಕಳು ಜಿಲ್ಲಾ ಮಟ್ಟದ ಕ್ರೀಡೆಗೆ ಮತ್ತು ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುವುದು ಹಾಗೂ ಈ ಶಾಲೆಯ 8 ವಿದ್ಯಾರ್ಥಿಗಳು ಮಾತೃಭಾಷೆ ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದು ಹೇಳಿದರು.
ಸ್ಥಳದಲ್ಲಿಯೇ ಈ ಶಾಲೆಯ 80 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ತಮ್ಮ ಸ್ವಂತ ಹಣದಲ್ಲಿ ನಗದು ರೂಪದಲ್ಲಿ ನೀಡಿದ ಶಾಸಕರು, ಗ್ರಾಮಾಂತರ ಕ್ಷೇತ್ರದ ಯಾವುದೇ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿದರೆ ಅವರಿಗೆ ನಗದು ರೂಪದ ಬಹುಮಾನ ನೀಡುವುದಾಗಿ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ರಂಗಸ್ವಾಮಯ್ಯ ಮಾತನಾಡಿ, ‘ಸರ್ಕಾರಿ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ಉಚಿತ ಸೈಕಲ್ ವಿತರಿಸಲಾಯಿತು. ಕಂಪ್ಯೂಟರ್ ವಿಭಾಗವನ್ನು ಉದ್ಘಾಟಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಯ್ಯ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹಾಲನೂರು ಅನಂತ್, ಪ್ರಾಂಶುಪಾಲರಾದ ಗಂಗಣ್ಣ, ಉಪ ಪಾಂಶುಪಾಲರಾದ ಜಿ.ಟಿ ಚೇತನ, ಎಸ್ಡಿ ಎಂಸಿ ಉಪಾಧ್ಯಕ್ಷ ಸಿರಿವರ ಶಿವಮೂರ್ತಿ,ಪಿಡಿಒ ಅಮ್ಜದ್ ಪಾಷ ,ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.