ಗುಬ್ಬಿ: ಧರ್ಮಸ್ಥಳದ ಸೌಜನ್ಯ ಸಾವಿಗೆ ನ್ಯಾಯ ಸಿಗಲಿ ಎಂದು ಆಗ್ರಹಿಸಿ ಭಾರತ್ ಭೀಮ್ ಸೇನಾ ವತಿಯಿಂದ ಸೋಮವಾರ ಗುಬ್ಬಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಲಾಯಿತು.
ಗುಬ್ಬಿ ಬಸ್ ನಿಲ್ದಾಣದ ಬಳಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಧರ್ಮಸ್ಥಳದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಸೌಜನ್ಯ ಸೇರಿದಂತೆ ಅನ್ಯಾಯಕ್ಕೆ ಒಳಗಾಗಿರುವ ಎಲ್ಲ ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿರುವ ಸೌಜನ್ಯ ಪ್ರಕರಣವನ್ನು ದಿಕ್ಕು ತಪ್ಪಿಸುವ ಕೆಲಸವಾಗಿದೆ. ಅನ್ಯಾಯಕ್ಕೆ ಒಳಗಾದವರಿಗೆ ದಶಕ ಕಳೆದರೂ ನ್ಯಾಯ ಸಿಗದಿರುವುದು ವಿಪರ್ಯಾಸ ಎಂದರು.
ಇತ್ತೀಚೆಗೆ ಸರ್ಕಾರ ವಿಶೇಷ ತನಿಖಾ ತಂಡ ನೇಮಿಸಿರುವುದು ಸ್ವಾಗತರ್ಹ. ತನಿಖಾ ತಂಡದ ರಚನೆ ಕೇವಲ ನಾಮಕಾವಸ್ತೆಗೆ ಆಗದೆ ಸಂಪೂರ್ಣ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಆರೋಪಿಗಳು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.
ಸರ್ಕಾರವು ಕಣ್ಣೊರೆಸುವ ನಾಟಕ ಆಡಿದ್ದಲ್ಲಿ ವಿಧಾನಸೌಧದ ಮುಂದೆ ತಮಟೆ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪಾದಯಾತ್ರೆಯಲ್ಲಿ ಜೈ ಭೀಮ್ ಸೇನೆ ರಾಜ್ಯಾಧ್ಯಕ್ಷ ದಿನೇಶ್, ಯುವ ಘಟಕದ ರಾಜ್ಯಾಧ್ಯಕ್ಷ ಸಚಿನ್, ಸಂಘಟನಾ ಕಾರ್ಯದರ್ಶಿ ಮಧು, ರಾಜ್ಯ ಉಪಾಧ್ಯಕ್ಷ ಮಂಜುನಾಥ್, ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ರಿಜ್ವಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಇಮ್ರಾನ್, ರಾಜ್ಯ ಯುವ ಘಟಕದ ಉಪಾಧ್ಯಕ್ಷ ವಿಜಯ ಭಾಸ್ಕರ್, ಜಿಲ್ಲಾಧ್ಯಕ್ಷ ಗಿರೀಶ್, ಮಹಿಳಾ ಅಧ್ಯಕ್ಷೆ ಮಂಜುಳಾ, ಸಾದತ್, ತಾಲ್ಲೂಕು ಅಧ್ಯಕ್ಷ ರಿಜ್ವಾನ್, ನಗರಾಧ್ಯಕ್ಷ ವಾಸುಗೌಡ ಹಾಗೂ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.