
ತುಮಕೂರು: ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಶೇ 3 ರಷ್ಟು, ಇತರೆ ಇಲಾಖೆಗಳಲ್ಲಿ ಶೇ 2 ರಷ್ಟು ಮೀಸಲಾತಿ ನಿಗದಿ ಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಸೋಮವಾರ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಹಾಗೂ ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಭಾರತೀಯ ಸೇನೆಯಲ್ಲೂ ಕ್ರೀಡಾಪಟುಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕ್ರೀಡೆ ಮನುಷ್ಯನಿಗೆ ಶಿಸ್ತು, ಆರೋಗ್ಯದ ಜತೆಗೆ ಬದುಕಿನ ಪಾಠ ಕಲಿಸುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಹೊಂದಿರಬೇಕು ಎಂದು ಸಲಹೆ ಮಾಡಿದರು.
ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರು ವರ್ಷಕ್ಕೊಮ್ಮೆ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಒತ್ತಡದಿಂದ ಹೊರ ಬರಲು ಇದು ಸಹಕಾರಿಯಾಗುತ್ತದೆ. ಪ್ರತಿಭೆ ಇರುವವರು ಹೆಚ್ಚು ಅಭ್ಯಾಸ ನಡೆಸುವ ಮೂಲಕ ರಾಷ್ಟ್ರೀಯ, ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಂಕಲ್ಪ ತೊಡಬೇಕು ಎಂದರು.
ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕುಣಿಗಲ್, ತಿಪಟೂರು, ಮಧುಗಿರಿ, ತುಮಕೂರು, ಶಿರಾ ಉಪವಿಭಾಗದ ಪೊಲೀಸರಿಂದ ಪಥ ಸಂಚಲನ ನಡೆಯಿತು. ಓಟ, ಗುಂಡು ಎಸೆತ, ಕಬಡ್ಡಿ, ವಾಲಿಬಾಲ್ ಸೇರಿ ಇತರೆ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಗೋಪಾಲ್, ಪುರುಷೋತ್ತಮ್, 12ನೇ ಕೆಎಸ್ಆರ್ಪಿ ಬೆಟಾಲಿಯನ್ ಮುಖ್ಯಸ್ಥ ಹಂಜಾ ಹುಸೇನ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.