ADVERTISEMENT

ತುಮಕೂರಿಗೆ ಕೊರೊನಾ ಪತ್ತೆ ಪ್ರಯೋಗಾಲಯ: ಆರೋಗ್ಯ ಸಚಿವರ ಭರವಸೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಕೋವಿಡ್‌ ನಿಯಂತ್ರಣದ ಕ್ರಮಗಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2020, 14:35 IST
Last Updated 25 ಏಪ್ರಿಲ್ 2020, 14:35 IST
ಸಚಿವ ಶ್ರೀರಾಮುಲು ಅವರು ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಡಿಸಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು
ಸಚಿವ ಶ್ರೀರಾಮುಲು ಅವರು ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಡಿಸಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು   

ತುಮಕೂರು: ಕೊರೊನಾ ಸೋಂಕು ಪತ್ತೆಗಾಗಿ ಜಿಲ್ಲೆಗೆ 8 ಸಾವಿರ ರ‍್ಯಾಪಿಡ್ ಟೆಸ್ಟ್ ಕಿಟ್‌ಗಳನ್ನು ನೀಡಲಾಗುವುದು. ತುಮಕೂರು ಸೇರಿದಂತೆ ರಾಜ್ಯದ 40 ಕಡೆ ಪ್ರಯೋಗಾಲಯ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.

ಕೋವಿಡ್‌–19 ಕಾಯಿಲೆ ನಿಯಂತ್ರಣದ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯವು ಕೋವಿಡ್–19 ನಿಯಂತ್ರಣದಲ್ಲಿ 11ನೇ ಸ್ಥಾನದಲ್ಲಿದೆ. ಇದರಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿ ಶ್ರಮವಿದೆ. ಕಂಟೈನ್ಮೆಂಟ್‌ ವಲಯವೆಂದು ಸೀಲ್‌ಡೌನ್ ಮಾಡಿರುವ ಕಡೆ ಬಂದೋಬಸ್ತ್‌ಗೆ ಒತ್ತುನೀಡುವಂತೆ ಸೂಚಿಸಿದರು.

ADVERTISEMENT

ಸೋಂಕಿನ ಲಕ್ಷಣಗಳು ಕಂಡುಬಂದರೆ, ಕ್ವಾರಂಟೈನ್ ಮಾಡಲಾಗುತ್ತಿದೆ. ಈವರೆಗೂ ಶಂಕಿತ 140 ಜನರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎರಡು ನಿಯಂತ್ರಣ ಕೊಠಡಿ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಂದ್ರಿಕಾ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕೆ.ರಾಕೇಶ್‌ಕುಮಾರ್, ‘ವಿದೇಶದಿಂದ ಬಂದವರ ಕ್ವಾರಂಟೈನ್ ಅವಧಿ ಮುಗಿದಿದ್ದರೂ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಹೆಚ್ಚಿನ ಸೋಂಕು ಹರಡಿರುವ ವಿದೇಶಗಳಿಂದ ಬಂದವರ ಮಾದರಿಗಳು 2ನೇ ಬಾರಿಯೂ ನೆಗೆಟಿವ್ ಬಂದಿವೆ’ ಎಂದು ಸಚಿವರ ಗಮನಕ್ಕೆ ತಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ ಹಾಜರಿದ್ದರು.

**

ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ಮಾಡಿಸುತ್ತಿದ್ದೇವೆ. ಈ ಪ್ರಯೋಗದಿಂದ ಗುಣಮುಖರಾದವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದಾಗಬೇಕು.
-ಶ್ರೀರಾಮಲು, ಆರೋಗ್ಯ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.