
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ 27 ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಸೂಚನೆ ನೀಡಿದರು.
ತಾಲ್ಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.
ಗ್ರಾಮಗಳಲ್ಲಿ ನೀರು ವ್ಯರ್ಥವಾಗಿ ಹರಿಯದಂತೆ ನೋಡಿಕೊಳ್ಳುವುದು ವಾಟರ್ಮನ್ಗಳ ಕರ್ತವ್ಯ. ಅವರು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ನಿಗಾ ಇಡಬೇಕು. ನೀರಿನ ಲಭ್ಯತೆ ಬಗ್ಗೆ ಪ್ರತಿವಾರ ನಿಖರ ಮಾಹಿತಿ ನೀಡಬೇಕು. ನೀರಿನ ಅಭಾವವಿರುವ ಕಡೆಗಳಲ್ಲಿ ಅಗತ್ಯವಿದ್ದರೆ ಖಾಸಗಿ ಬೋರ್ವೆಲ್ಗಳಿಂದ ನೀರನ್ನು ಪಡೆದು ಸಾರ್ವಜನಿಕರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಸರ್ಕಾರಿ ಬೋರ್ವೆಲ್ಗಳ ಸ್ಥಿತಿಗತಿಯ ಬಗ್ಗೆ ಅಧಿಕಾರಿಗಳಿಗೆ ಪೂರ್ಣ ಮಾಹಿತಿ ಇರಬೇಕು. ಪ್ರಸ್ತುತ ಜಾತ್ರೆ ಹೆಚ್ಚಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚು. ಆದ್ದರಿಂದ ಆರೋಗ್ಯ ಇಲಾಖೆ ಮತ್ತು ಪಂಚಾಯಿತಿ ಅಧಿಕಾರಿಗಳು ಜಾತ್ರಾ ಸ್ಥಳಗಳಲ್ಲಿ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಬೇಸಿಗೆ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ಪಶುಪಾಲನಾ ಇಲಾಖೆ ಗಮನಹರಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಮಮತಾ ಎಂ.ಮಾತನಾಡಿ, ನೋಡೆಲ್ ಅಧಿಕಾರಿಗಳು ಪಂಚಾಯಿತಿಗಳೊಂದಿಗೆ ಸಕ್ರಿಯ ಸಂಪರ್ಕದಲ್ಲಿರಬೇಕು. ನಾನು ಗ್ರಾಮಗಳಿಗೆ ಭೇಟಿ ನೀಡಿದಾಗ ನೀರು ಪೋಲಾಗುತ್ತಿರುವುದು ಕಂಡುಬಂದಿದೆ. ಇದನ್ನು ತಕ್ಷಣ ನಿಲ್ಲಿಸಬೇಕು. ಬೋರ್ವೆಲ್ಗಳ ಆಳ ಮತ್ತು ನೀರಿನ ಲಭ್ಯತೆಯ ದಾಖಲೆಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದರು.
ಪಶು ಇಲಾಖೆ ಸಹಾಯಕ ನಿರ್ದೇಶಕ ಕಾಂತರಾಜು ಮಾತನಾಡಿ, ತಾಲ್ಲೂಕಿನ ರೈತರಲ್ಲಿ ಮುಂದಿನ 49 ವಾರಗಳಿಗೆ ಆಗುವಷ್ಟು ಮೇವಿನ ಸಂಗ್ರಹವಿದೆ. ಸದ್ಯಕ್ಕೆ ಮೇವಿನ ಅಭಾವ ಉಂಟಾಗುವ ಸಾಧ್ಯತೆ ಇಲ್ಲ ಎಂದು ಮಾಹಿತಿ ನೀಡಿದರು.
ಸದ್ಯಕ್ಕೆ ನೀರಿನ ಸಮಸ್ಯೆ ಎದುರಿಸುತ್ತಿರುವ ಹೊನ್ನೇಬಾಗಿ, ಸಿದ್ದನಕಟ್ಟೆ ಹಾಗೂ ದಸೂಡಿಯ ಮಾಳಮ್ಮನಹಟ್ಟಿ ಗ್ರಾಮಗಳಲ್ಲಿ ತಕ್ಷಣವೇ ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಇಒ ದೊಡ್ಡಸಿದ್ದಯ್ಯ, ಲೋಕೋಪಯೋಗಿ ಇಲಾಖೆ ಎಇಇ ತಿಮ್ಮಯ್ಯ, ಬೆಸ್ಕಾಂ ಎಇಇ ಗವಿರಂಗಯ್ಯ, ಕುಡಿಯುವ ನೀರಿನ ವಿಭಾಗದ ಎಇಇ ಮಾರುತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ್ಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.