ತುಮಕೂರು: ಜಿಲ್ಲೆಯ ವಿವಿಧೆಡೆ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಕಾಮಗಾರಿ ಕುಂಟುತ್ತಾ ಸಾಗಿದೆ. ಕೆಲವು ಕಡೆಗಳಲ್ಲಿ ಕೆಲಸ ಮುಗಿದು ತಿಂಗಳುಗಳೇ ಕಳೆದಿದ್ದರೂ ಕಾರ್ಯಾರಂಭ ಮಾಡಿಲ್ಲ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡಗಳು ಕೇವಲ ಉದ್ಘಾಟನೆಗೆ ಸೀಮಿತವಾಗಿವೆ.
ತುಮಕೂರು ತಾಲ್ಲೂಕಿನಲ್ಲಿ 3, ತುರುವೇಕೆರೆಯಲ್ಲಿ 2, ಪಾವಗಡದಲ್ಲಿ 6, ಮಧುಗಿರಿ ಮತ್ತು ತಿಪಟೂರಿನಲ್ಲಿ ತಲಾ 1 ಸೇರಿ ಒಟ್ಟು 13 ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೇಲುಸ್ತುವಾರಿಯಲ್ಲಿ ಕಟ್ಟಡಗಳು ತಲೆಎತ್ತುತ್ತಿವೆ. ಇದರಲ್ಲಿ 3 ಹೊರತುಪಡಿಸಿ ಉಳಿದ ಎಲ್ಲ ಹಾಸ್ಟೆಲ್ಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಆದರೆ ಇದುವರೆಗೆ ವಿದ್ಯಾರ್ಥಿಗಳ ಬಳಕೆಗೆ ನೀಡಿಲ್ಲ.
ಪ್ರತಿ ಹಾಸ್ಟೆಲ್ಗೆ ₹5 ಕೋಟಿಯಿಂದ ₹6 ಕೋಟಿ ವೆಚ್ಚ ಮಾಡಲಾಗುತ್ತಿದೆ. ಮೂರು ವರ್ಷಗಳ ಹಿಂದೆ ಹಾಸ್ಟೆಲ್ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಪ್ರಾರಂಭದಲ್ಲಿ ವೇಗ ಪಡೆದ ಕಾಮಗಾರಿಗಳು ನಂತರ ಆಮೆಗತಿಯಲ್ಲಿ ಸಾಗಿದ್ದವು. ಸದ್ಯ ಕಾಮಗಾರಿ ಕೆಲಸ ಮುಕ್ತಾಯವಾಗಿರುವ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳ ವಾಸಕ್ಕೆ ಅನುವು ಮಾಡಿಕೊಟ್ಟಿಲ್ಲ.
11 ಸಾವಿರ ವಿದ್ಯಾರ್ಥಿ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ 102 ಹಾಸ್ಟೆಲ್ಗಳಿವೆ. 73 ಬಾಲಕರು, 29 ಬಾಲಕಿಯರ ಹಾಸ್ಟೆಲ್ನಲ್ಲಿ 11 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. 10,135 ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶ ಇದ್ದು, 11,638 ಮಂದಿ ಪ್ರವೇಶ ಪಡೆದಿದ್ದಾರೆ. ಹಾಸ್ಟೆಲ್ಗಳಿಗೆ ಬೇಡಿಕೆಯೂ ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗುತ್ತಿದೆ. ಹಾಸ್ಟೆಲ್ ಕಟ್ಟಡ ನಿರ್ಮಾಣ ಕಾರ್ಯ ಮಾತ್ರ ವೇಗ ಪಡೆಯುತ್ತಿಲ್ಲ.
102 ವಿದ್ಯಾರ್ಥಿ ನಿಲಯಗಳ ಪೈಕಿ 14 ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. 7 ಹಾಸ್ಟೆಲ್ಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ನಿವೇಶನ ಗುರುತಿಸಲಾಗಿದೆ. 2 ಕಟ್ಟಡಗಳ ನಿರ್ಮಾಣಕ್ಕೆ ನಿವೇಶನದ ಹುಡುಕಾಟದಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದಾರೆ. ಸರ್ಕಾರದಿಂದ ಸಮರ್ಪಕವಾಗಿ ಅನುದಾನ ಬಾರದೆ ಇರುವುದು ಸಹ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ.
5 ಹಾಸ್ಟೆಲ್ ಅಗತ್ಯ: ತುಮಕೂರು ಶಿಕ್ಷಣದ ಹಬ್ ಆಗಿ ಬದಲಾಗುತ್ತಿದೆ. ಶಿಕ್ಷಣಕ್ಕಾಗಿ ನಗರಕ್ಕೆ ಬರುವವರ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ದುಪ್ಪಟ್ಟಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ಗಳಿಲ್ಲ. ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಇನ್ನೂ 5 ಹಾಸ್ಟೆಲ್ಗಳ ಅವಶ್ಯಕತೆ ಇದೆ.
ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ದಕ್ಷಿಣ ಜಿಲ್ಲೆಗಳ ಯುವಕರು ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಯ ಕಡೆ ಬರುತ್ತಾರೆ. ಜಿಲ್ಲೆಯ ಎಲ್ಲ ತಾಲ್ಲೂಕಿನ ವಿದ್ಯಾರ್ಥಿಗಳು ಎಂಜಿನಿಯರಿಂಗ್, ವೈದ್ಯಕೀಯ, ಬಿ.ಇಡಿ, ಸ್ನಾತಕೋತ್ತರ ಶಿಕ್ಷಣಕ್ಕಾಗಿ ಜಿಲ್ಲಾ ಕೇಂದ್ರಕ್ಕೆ ಬರುತ್ತಿದ್ದಾರೆ. ಇದರಿಂದಾಗಿ ಹಾಸ್ಟೆಲ್ಗಳಿಗೆ ಬೇಡಿಕೆ ಹೆಚ್ಚಾಗಿದೆ.
ಒಂದು ತಿಂಗಳಲ್ಲಿ ಪ್ರವೇಶ: ನೀರು ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಹಾಸಿಗೆ ಮಂಚಗಳನ್ನು ಪೂರೈಕೆ ಮಾಡಲಾಗುತ್ತಿದೆ. ಒಂದು ತಿಂಗಳಲ್ಲಿ ಪ್ರವೇಶಕ್ಕೆ ಅನುವು ಮಾಡಿಕೊಳ್ಳಲಾಗುತ್ತದೆ. ಎಲ್ಲ ಹಾಸ್ಟೆಲ್ಗಳು ಹಸ್ತಾಂತರವಾದರೆ ಅರ್ಧದಷ್ಟು ಸಮಸ್ಯೆಗಳು ಬಗೆಹರಿಯಲಿವೆ.ಕೃಷ್ಣಪ್ಪ ಜಂಟಿ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ
ಮುಖ್ಯಮಂತ್ರಿ ಚಾಲನೆ:
ಜುಲೈ 21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಾವಗಡಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಇದೇ ವೇಳೆ ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ 6 ಹಾಸ್ಟೆಲ್ ಉದ್ಘಾಟಿಸಿದ್ದರು. ಆದರೆ ಈವರೆಗೂ ಇಲ್ಲಿ ವಿದ್ಯಾರ್ಥಿಗಳ ವಾಸಕ್ಕೆ ಅವಕಾಶ ಕಲ್ಪಿಸಿಲ್ಲ. ಪಾವಗಡ ಅತೀ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಪಡೆದಿದೆ. ತಾಲ್ಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದಲೇ ಹೊಸದಾಗಿ 6 ಹಾಸ್ಟೆಲ್ ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಬೃಹತ್ ಕಟ್ಟಡಗಳು ತಲೆ ಎತ್ತಿ ವರ್ಷಗಳು ಕಳೆದರೂ ವಿದ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.