ಕೊರಟಗೆರೆ: ‘ವಿದ್ಯಾರ್ಥಿ ಜೀವನ ಬಹಳ ಮಹತ್ತರವಾದುದು. ಈ ಹಂತದಲ್ಲಿ ಏನನ್ನು ಬೇಕಾದರೂ ಸಾಧಿಸುವ ಮನಸ್ಸು ವಿದ್ಯಾರ್ಥಿಗಳಲ್ಲಿ ಇರುತ್ತದೆ. ಆದ್ದರಿಂದ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಶಾಸಕ ಡಾ.ಜಿ. ಪರಮೇಶ್ವರ ತಿಳಿಸಿದರು.
ಪಟ್ಟಣದ ಜೂನಿಯರ್ ಪಿಯು ಕಾಲೇಜಿನಲ್ಲಿ ಮಂಗಳವಾರ ಆಯೋ ಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಮಾತನಾಡಿದರು.
ಕಾಲೇಜು ಹಂತದಲ್ಲಿ ಎನ್.ಸಿ.ಸಿ. ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಬಹಳ ಅನುಕೂಲವಾಗಲಿದೆ. ಎನ್.ಸಿ.ಸಿ ಬದುಕಿನಲ್ಲಿ ಹೇಗೆ ಬದುಕಬೇಕೆಂಬ ಶಿಸ್ತು ಕಲಿಸುತ್ತದೆ ಎಂದರು.
ವಿದ್ಯಾರ್ಥಿ ಬದುಕಿನಲ್ಲಿ ಎಲ್ಲ ರೀತಿ ಬೆಳೆಯಲು ಅವಕಾಶ ಇದೆ. ಆ ಕಾರಣದಿಂದ ಸಿಕ್ಕ ಅವಕಾಶಗಳನ್ನು ಬಿಡದೆ ಬಳಸಿಕೊಂಡು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು.
ಕಳೆದ ಸಾಲಿನ ದ್ವಿತೀಯ ಪಿಯುನಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ನೇರಂ ನಾಗರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಜಿ. ಹನುಮಂತರಾಯಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಎ.ಡಿ. ಬಲರಾಮಯ್ಯ, ಮುಖಂಡರಾದ ಜಯರಾಮ್, ಸೋಮಣ್ಣ, ನಾಗಭೂಷಣ್, ಮುರಳೀ ಕೃಷ್ಣ, ಉಪನ್ಯಾಸಕರಾದ ಗಿರೀಶ್, ನೀಹ ರವಿಕುಮಾರ್, ಸುಗ್ಗಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.