ADVERTISEMENT

ತುಮಕೂರು | ವಿದ್ಯಾರ್ಥಿ ವೇತನ: ₹55 ಲಕ್ಷ ದುರುಪಯೋಗ

ಶ್ರೀಕೃಷ್ಣ ಕಾಲೇಜು, ಯಡಿಯೂರು ಸಿದ್ಧಲಿಂಗೇಶ್ವರ ಕಾಲೇಜು ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 5:12 IST
Last Updated 2 ಆಗಸ್ಟ್ 2025, 5:12 IST
(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)   

ತುಮಕೂರು: ನಗರದ ಎರಡು ಕಾಲೇಜು, ಯಡಿಯೂರಿನ ಒಂದು ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ದುರುಪಯೋಗ ಪಡಿಸಿಕೊಂಡಿದ್ದು, 456 ವಿದ್ಯಾರ್ಥಿಗಳ ಹೆಸರಿನಲ್ಲಿ ಒಟ್ಟು ₹55,46,500 ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ತನಿಖೆ ನಡೆಸಿ, ಮೂರು ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಅಲ್ಪ ಸಂಖ್ಯಾತರ ಇಲಾಖೆಯ ತುಮಕೂರು ಉಪ ವಿಭಾಗದ ವಿಸ್ತರಣಾಧಿಕಾರಿ ತಿಪ್ಪೇಸ್ವಾಮಿ ದೂರು ನೀಡಿದ್ದು, ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನ ಸಾರಾಂಶ: 2021–22ನೇ ಸಾಲು ಹಾಗೂ 2022–23ನೇ ಸಾಲಿನಲ್ಲಿ ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವಾಲಯದ (ಎಂಒಎಂಎ) ರಾಷ್ಟ್ರೀಯ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳಲ್ಲಿ ಅನುಮಾನ ಕಂಡು ಬಂದಿದೆ. ವಿದ್ಯಾರ್ಥಿಗಳ ಹೆಸರಿನಲ್ಲಿ ನಕಲಿ ಅರ್ಜಿ ಸಲ್ಲಿಸಿ, ವಿದ್ಯಾರ್ಥಿ ವೇತನ ಪಡೆದುಕೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ADVERTISEMENT

ನಗರದ ಶ್ರೀಕೃಷ್ಣ ಕಾನೂನು ಕಾಲೇಜಿನಲ್ಲಿ 2021–22ನೇ ಸಾಲು ಹಾಗೂ 2022–23ನೇ ಸಾಲಿನಲ್ಲಿ ಯಾವುದೇ ವಿದ್ಯಾರ್ಥಿಗಳು ಎನ್‌ಎಸ್‌ಪಿ ಪೋರ್ಟಲ್‌ನಲ್ಲಿ ವಿದ್ಯಾರ್ಥಿ ವೇತನ ಕೋರಿ ಅರ್ಜಿ ಸಲ್ಲಿಸಿಲ್ಲ. ಆದರೂ 150 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದಂತೆ ತೋರಿಸಿ, ನಕಲಿ ಅರ್ಜಿಗಳನ್ನು ಸೃಷ್ಟಿಸಿ ₹22,39,500 ವಿದ್ಯಾರ್ಥಿ ವೇತನ ಪಡೆದುಕೊಳ್ಳಲಾಗಿದೆ. ಅದೇ ರೀತಿ ಶ್ರೀಕೃಷ್ಣ ನರ್ಸಿಂಗ್ ಕಾಲೇಜಿನಲ್ಲಿ 295 ವಿದ್ಯಾರ್ಥಿಗಳ ಹೆಸರಿನಲ್ಲಿ ನಕಲಿ ಅರ್ಜಿ ಸಲ್ಲಿಸಿ, ₹31,89,100 ವಿದ್ಯಾರ್ಥಿ ವೇತನ ಪಡೆದುಕೊಂಡು ವಂಚಿಸಲಾಗಿದೆ ಎಂದು ದೂರಿನಲ್ಲಿ ನಮೂದಿಸಲಾಗಿದೆ.

ಇದೇ ಮಾದರಿಯಲ್ಲಿ ಕುಣಿಗಲ್ ತಾಲ್ಲೂಕು ಯಡಿಯೂರು ಸಿದ್ಧಲಿಂಗೇಶ್ವರ ಪದವಿಪೂರ್ವ ಕಾಲೇಜಿನಲ್ಲೂ ವಂಚಿಸಿರುವುದು ಕಂಡು ಬಂದಿದೆ. 2021–22ನೇ ಸಾಲು ಹಾಗೂ 2022–23ನೇ ಸಾಲಿನಲ್ಲಿ 11 ವಿದ್ಯಾರ್ಥಿಗಳ ಹೆಸರಿನಲ್ಲಿ ನಕಲಿ ಅರ್ಜಿ ಸಲ್ಲಿಸಿ, ₹1,17,900 ವಿದ್ಯಾರ್ಥಿ ವೇತನ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಖುದ್ದು ಕಾಲೇಜಿಗೆ ಭೇಟಿ ನೀಡಿ, ಅನುದಾನ ದುರುಪಯೋಗ ಆಗಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿರುವಂತೆ ಅಲ್ಪ ಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ನಿರ್ದೇಶನ ನೀಡಿದ್ದಾರೆ. ಹಾಗಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಜುಲೈ 30ರಂದು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.