ಮಧುಗಿರಿ: ಸ್ವಚ್ಛ ಸರ್ವೇಕ್ಷಣಾ ಅಭಿಯಾನದ 2020ನೇ ಸಾಲಿನಲ್ಲಿ ಮಧುಗಿರಿ ಪುರಸಭೆ ದಕ್ಷಿಣ ಭಾರತ ವಲಯದಲ್ಲಿ 18ನೇ ಸ್ಥಾನ ಹಾಗೂ ರಾಜ್ಯದಲ್ಲಿ 4ನೇ ಸ್ಥಾನ ಪಡೆದಿದ್ದು, ಪುರಸಭೆ ಅಧಿಕಾರಿಗಳ ಹಾಗೂ ಕಾರ್ಮಿಕರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್ಗಳಿದ್ದು, 35 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಪಟ್ಟಣದ ಪ್ರತಿಯೊಂದು ವಾರ್ಡ್ಗೂ ಕಾರ್ಮಿಕರನ್ನು ನೇಮಿಸಿ, ಮನೆ ಮನೆಗೆ ಭೇಟಿ ನೀಡಿ ಒಣ ಕಸ ಹಾಗೂ ಹಸಿ ಕಸವನ್ನು ಬೇರ್ಪಡಿಸಿಕೊಂಡು ಸ್ವೀಕರಿಸಲಾಗುತ್ತಿದೆ. ಜತೆಗೆ ಕಸವನ್ನು ರಸ್ತೆಗೆ ಹಾಕದಂತೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ.
ಪಟ್ಟಣದ ಗೌರಿಬಿದನೂರು ರಸ್ತೆಯಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕ 12 ಎಕರೆ ಪ್ರದೇಶದಲ್ಲಿದ್ದು, ಪಟ್ಟಣದಲ್ಲಿ ಶೇಖರಣೆ ಮಾಡಿದ ಒಣ ಕಸ ಹಾಗೂ ಹಸಿ ಕಸವನ್ನು ಬೇರೆ ಮಾಡಿ 6 ಕಾರ್ಮಿಕರಿಂದ ಗೊಬ್ಬರ ತಯಾರು ಮಾಡಿ ರೈತರಿಗೆ ಕೆ.ಜಿ.ಗೆ ₹5ಕ್ಕೆ ಮಾರಾಟ ಮಾಡಲಾಗುತ್ತಿದೆ. ಕಳೆದ ವರ್ಷ ಗೊಬ್ಬರದಿಂದ ₹90 ಸಾವಿರ ಆದಾಯ ಬಂದಿದೆ.
ಪಟ್ಟಣದ ಅಂಗಡಿ ಮಾಲೀಕರಿಗೆ ಹಾಗೂ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಕವರ್ ಬಳಕೆ ಮಾಡದಂತೆ ಅರಿವು ಮೂಡಿಸಲಾಗಿದೆ. ವೈಯಕ್ತಿಕ ಶೌಚಾಲಯ, ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಿಬಯಲು ಶೌಚ ನಿರ್ಮೂಲನೆ ಮಾಡಲಗಿದೆ. ಜಲ ಸಂರಕ್ಷಣೆ ಸೇರಿದಂತೆ ಪರಿಸರ ರಕ್ಷಣೆಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.