ತುಮಕೂರು: ಕೌಶಲ ಹೊಂದಿದ ಕೆಲಸಗಾರರನ್ನು ಒದಗಿಸುವ ನಿಟ್ಟಿನಲ್ಲಿ ಎಚ್ಎಂಎಸ್ತಾಂತ್ರಿಕ ಮಹಾವಿದ್ಯಾಲಯ ಕಳೆದ ಐದು ವರ್ಷಗಳಿಂದ ನೂರಾರು ಮಕ್ಕಳಿಗೆ ಕಂಪ್ಯೂಟರ್ ಸೇರಿದಂತೆ ಹಲವು ವಿಷಯಗಳಲ್ಲಿ ತರಬೇತಿ ನೀಡಿ, ಬದುಕು ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ ಎಂದು ಸಂಸ್ಥೆ ನಿರ್ದೇಶಕ ಡಾ.ರಫೀಕ್ ಅಹಮದ್ ತಿಳಿಸಿದರು.
ಎಚ್ಎಂಎಸ್ ತಾಂತ್ರಿಕ ಮಹಾವಿದ್ಯಾಲಯ, ಅಪ್ಲಿಪ್ಟ್ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಒಂದು ತಿಂಗಳ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಚಿತವಾಗಿ ವಸತಿಯುತ ತರಬೇತಿ ನೀಡಲಾಗುತ್ತಿದೆ ಎಂದರು.
ಆರ್ಥಿಕವಾಗಿ ಸಂಕಷ್ಟದಲ್ಲಿರುವ ತಳ ಸಮುದಾಯಗಳ ಯುವಕರಿಗೆ ಕಂಪ್ಯೂಟರ್, ಸರ್ವೆ, ಏಲೆಕ್ಟ್ರಿಕಲ್ ವೈರಿಂಗ್, ಪ್ಲಬಿಂಗ್, ಸಿವಿಲ್ ಎಂಜಿನಿಯರಿಂಗ್ನಲ್ಲಿ ಪ್ರಾಯೋಗಿಕವಾಗಿ ಬೋಧನೆ ಮಾಡಲಾಗುತ್ತಿದೆ. ತರಬೇತಿ ಪಡೆದ ಹಲವರು ಸರ್ಕಾರಿ, ಅರೆಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ವಿವರಿಸಿದರು.
ಎಚ್ಎಂಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ಷಪಿ ಅಹಮದ್, ‘ನಗರದ ಸುತ್ತಮುತ್ತ ಸಾವಿರಾರು ಕೈಗಾರಿಕೆಗಳು ಆರಂಭವಾಗಿವೆ. ಕೈಗಾರಿಕೆಗಳಿಗೆ ಕೌಶಲ ಹೊಂದಿದ ಕೆಲಸಗಾರರನ್ನು ಒದಗಿಸುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ. ನಿರುದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಬೇಕು ಎಂಬುದು ನಮ್ಮ ಉದ್ದೇಶವಾಗಿದೆ’ ಎಂದು ಹೇಳಿದರು.
ಅಪ್ಲಿಪ್ಟ್ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಖಾಸೀಂ ಸಾಬ್, ‘ಕೋವಿಡ್ನಿಂದಾಗಿ ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದಾರೆ. ಇನ್ನೊಂದೆಡೆ ಕೌಶಲ ಹೊಂದಿದ ಕೆಲಸಗಾರರ ಕೊರತೆ ಇದೆ. ಯುವಜನತೆಗೆ ಕೌಶಲ ತರಬೇತಿ ಅಗತ್ಯವಾಗಿದೆ’ ಎಂದು ತಿಳಿಸಿದರು.
ಕಾಲೇಜು ಪ್ರಾಂಶುಪಾಲ ಇರ್ಫಾನ್, ‘ಸಮುದಾಯ ಅಭಿವೃದ್ಧಿ ನಿಧಿಯಲ್ಲಿ ತರಬೇತಿ ನೀಡಲಾಗುತ್ತಿದೆ. ಕೋವಿಡ್, ಆರ್ಥಿಕ ಹಿಂಜರಿಕೆಯಿಂದಾಗಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಇದನ್ನು ನೀಗಿಸುವ ನಿಟ್ಟಿನಲ್ಲಿ ತಮ್ಮ ಕೈಲಾದ ಸೇವೆ ಮಾಡಲಾಗುತ್ತಿದೆ’ ಎಂದರು.
ಅಪ್ಲಿಪ್ಟ್ ಚಾರಿಟಬಲ್ ಟ್ರಸ್ಟ್ ನಿರ್ದೇಶಕರಾದ ಉಸ್ಮಾನ್, ಲುಬ್ನಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.