ADVERTISEMENT

₹40 ಕೋಟಿ ವೆಚ್ಚದ ಕಾಮಗಾರಿ ಬಾಕಿ

ಕಾಮಗಾರಿ ಪೂರ್ಣಕ್ಕೆ ಒಂದು ತಿಂಗಳು ಗಡುವು

​ಪ್ರಜಾವಾಣಿ ವಾರ್ತೆ
Published 15 ಮೇ 2025, 5:15 IST
Last Updated 15 ಮೇ 2025, 5:15 IST
ತುಮಕೂರು ಮಹಾನಗರ ಪಾಲಿಕೆ ಕಚೇರಿ ಪಕ್ಕದಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಬುಧವಾರ ಸಚಿವ ರಹೀಂ ಖಾನ್‌ ಭೇಟಿ ನೀಡಿ ಪರಿಶೀಲಿಸಿದರು. ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಇತರರು ಉಪಸ್ಥಿತರಿದ್ದರು
ತುಮಕೂರು ಮಹಾನಗರ ಪಾಲಿಕೆ ಕಚೇರಿ ಪಕ್ಕದಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಬುಧವಾರ ಸಚಿವ ರಹೀಂ ಖಾನ್‌ ಭೇಟಿ ನೀಡಿ ಪರಿಶೀಲಿಸಿದರು. ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಇತರರು ಉಪಸ್ಥಿತರಿದ್ದರು   

ತುಮಕೂರು: ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ಜಿಲ್ಲೆಗೆ ₹102 ಕೋಟಿ ಅನುದಾನ ಮಂಜೂರಾಗಿದೆ. ಇದರಲ್ಲಿ ₹40 ಕೋಟಿ ವೆಚ್ಚದ ಕಾಮಗಾರಿ ಬಾಕಿ ಉಳಿದಿದ್ದು, ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಗಡುವು ನೀಡಲಾಗಿದೆ ಎಂದು ಪೌರಾಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌ ಇಲ್ಲಿ ಬುಧವಾರ ಹೇಳಿದರು.

ನಗರದಲ್ಲಿ ಎರಡು ಸೇರಿದಂತೆ ರಾಜ್ಯದಲ್ಲಿ 180 ಇಂದಿರಾ ಕ್ಯಾಂಟೀನ್‌ ನಿರ್ಮಿಸಲಾಗುತ್ತಿದೆ. ಈಗಾಗಲೇ ಕೆಲವು ಉದ್ಘಾಟನೆಯಾಗಿವೆ. ಮುಂದಿನ 15 ದಿನದಲ್ಲಿ ಎಲ್ಲ ಕ್ಯಾಂಟೀನ್‌ ಶುರುವಾಗಲಿವೆ. ಜಿಲ್ಲೆಯಲ್ಲಿ ಶೇ 50ರಷ್ಟು ಆಸ್ತಿಗಳಿಗೆ ಇ ಮತ್ತು ಬಿ–ಖಾತಾ ವಿತರಿಸಲಾಗಿದೆ. 10 ಸಾವಿರ ಇ–ಖಾತಾ, 5,900 ಬಿ–ಖಾತಾ ವಿತರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಶುದ್ಧ ನೀರು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಎಲ್ಲ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಆದ್ಯತೆ ನೀಡಬೇಕು. ಸ್ವಚ್ಛ, ಶುದ್ಧ ನೀರು ಸರಬರಾಜು ಮಾಡಲು ಕ್ರಮ ವಹಿಸುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಅಮಾನತಿನ ಎಚ್ಚರಿಕೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ‘ನಗರೋತ್ಥಾನ ಯೋಜನೆ ಅನುಷ್ಠಾನದಲ್ಲಿ ಹಿಂದೆ ಉಳಿದ ಅಧಿಕಾರಿಗಳ ಅಮಾನತಿಗೆ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಯೋಜನೆ ಪ್ರಾರಂಭವಾಗಿ 3 ವರ್ಷ ಕಳೆದರೂ ಕುಣಿಗಲ್‌ ಪುರಸಭೆಯಲ್ಲಿ ಕೇವಲ ಶೇ 14ರಷ್ಟು ಮಾತ್ರ ಭೌತಿಕ ಸಾಧನೆಯಾಗಿದೆ. 27 ಕಾಮಗಾರಿಗಳ ಪೈಕಿ ಕೇವಲ 4 ಮಾತ್ರ ಪೂರ್ಣಗೊಂಡಿವೆ. 6 ಕಾಮಗಾರಿ ಇನ್ನೂ ಟೆಂಡರ್‌ ಹಂತದಲ್ಲಿವೆ. ಪ್ರಗತಿಯಲ್ಲಿ ಹಿನ್ನಡೆಯಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಅವರನ್ನು ತರಾಟೆಗೆ ತೆಗೆದುಕೊಂಡರು.

ಯೋಜನೆಯಡಿ ಜಿಲ್ಲೆಗೆ ಇದುವರೆಗೆ ₹44.71 ಕೋಟಿ ಬಿಡುಗಡೆಯಾಗಿದೆ. ಈಗಾಗಲೇ ಈ ಯೋಜನೆ ಪೂರ್ಣಗೊಳ್ಳುವ ಹಂತಕ್ಕೆ ತಲುಪಬೇಕಾಗಿತ್ತು. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಲು ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2026 ಮಾರ್ಚ್‌ ವೇಳೆಗೆ ಯೋಜನೆ ಪೂರ್ಣಗೊಳಿಸಬೇಕಿದ್ದು, ಜನವರಿ ವೇಳೆಗೆ ಎಲ್ಲ ಸಿವಿಲ್‌ ಕಾಮಗಾರಿ ಮುಗಿಸಬೇಕು. ನಿಗದಿತ ಅವಧಿಯಲ್ಲಿ ಟೆಂಡರ್‌ ಅಂತಿಮಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ‘ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿಗೆ ಸಮಸ್ಯೆ ಇಲ್ಲ. ಪಾವಗಡ ಪುರಸಭೆಯ 2 ವಾರ್ಡ್‌ಗಳಲ್ಲಿ ಮಾತ್ರ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದರು.

ಕ್ಯಾಂಟೀನ್‌ಗಳಲ್ಲಿ ನಕಲಿ ಬಿಲ್‌

ಇಂದಿರಾ ಕ್ಯಾಂಟೀನ್‍ಗಳಲ್ಲಿ ಗುತ್ತಿಗೆದಾರರು ಊಟ ಮಾಡುವವರ ಲೆಕ್ಕವನ್ನು ತಪ್ಪಾಗಿ ನೀಡಿ ನಕಲಿ ಬಿಲ್‌ ಸೃಷ್ಟಿ ಮಾಡುತ್ತಿದ್ದಾರೆ. ಇದನ್ನು ತಡೆಯಲು ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಇನ್ನು ಮುಂದೆ ಇದಕ್ಕೆ ಕಡಿವಾಣ ಬೀಳಲಿದೆ. ರಹೀಂ ಖಾನ್‌ ಪೌರಾಡಳಿತ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.