ADVERTISEMENT

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ

ಕಾರ್ಮಿಕ, ರೈತ ವಿರೋಧಿ ಕಾಯ್ದೆ ರದ್ದುಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 3:57 IST
Last Updated 9 ಜನವರಿ 2021, 3:57 IST
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಐಟಿಯು ಕಾರ್ಯಕರ್ತರನ್ನು ತಡೆದ ಪೊಲೀಸರು
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಐಟಿಯು ಕಾರ್ಯಕರ್ತರನ್ನು ತಡೆದ ಪೊಲೀಸರು   

ತುಮಕೂರು: ರೈತ ಮತ್ತು ಜನ ವಿರೋಧಿಯಾದ ಕಾಯ್ದೆ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಮತ್ತು ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಐಟಿಯು ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ಬಂಧಿಸಿದರು.

ನಗರದ ಕಾರ್ಮಿಕ ಇಲಾಖೆ ಅಧಿಕಾರಿ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಕಾರ್ಯಕರ್ತರು ಮೆರವಣಿಗೆಯಲ್ಲಿ ತೆರಳಿದರು. ಅಲ್ಲಿ ಬಹಿರಂಗ ಸಭೆ ನಡೆಸಿದರು. ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳ ವಾಪಸ್‌ಗೆ ಆಗ್ರಹಿಸಿದರು. ನಂತರ ಕಚೇರಿ ಮುತ್ತಿಗೆಗೆಮುಂದಾದರು.

ಉದ್ಯೋಗ ಖಾತರಿ ಯೋಜನೆಯಡಿ ವಾರ್ಷಿಕ 200 ದಿನಗಳ ಕಾಲ ಕೆಲಸ ನೀಡಬೇಕು. ದಿನಕ್ಕೆ ₹ 700 ಕೂಲಿ ನೀಡಬೇಕು. ನಗರ ಪ್ರದೇಶಗಳಿಗೂ ಯೋಜನೆ ವಿಸ್ತರಿಸಬೇಕು. ಎಲ್ಲ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ರಕ್ಷಣಾ ಯೋಜನೆಗಳನ್ನು ವಿಸ್ತರಿಸಬೇಕು. ಉಚಿತ ಸಾರ್ವತ್ರಿಕ ಆರೋಗ್ಯ ರಕ್ಷಣೆ ಜಾರಿಗೊಳಿಸಬೇಕು. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿಯನ್ನು ಮತ್ತೆ ಜಾರಿಗೆ ತರಬೇಕು. ಬಡವರಿಗೆ ಪ್ರತಿ ತಿಂಗಳು 10 ಕೆ.ಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಬೇಕು. ನೂತನ ಶಿಕ್ಷಣನೀತಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ADVERTISEMENT

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕಮಲಾ ಮಾತನಾಡಿ, ‘ಕೇಂದ್ರ ಸರ್ಕಾರ ಸ್ಕೀಂ ನೌಕರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರದ ಜನವಿರೋಧಿಯಾಗಿದೆ’ ಎಂದು ಟೀಕಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಅಜ್ಜಪ್ಪ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಗುಲ್ಜಾರ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಎನ್.ಕೆ.ಸುಬ್ರಹ್ಮಣ್ಯ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ. ಉಮೇಶ್, ಎ.ಲೋಕೆಶ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಷಣ್ಮಖಪ್ಪ, ಜಿಲ್ಲಾ ಬೀಡಿ ಕಾರ್ಮಿಕರ ಸಂಘದ ನಿಸಾರ್ ಅಹಮದ್, ಹಮಾಲಿ ಕಾರ್ಮಿಕರ ಸಂಘದ ರಾಮಾಂಜಿನಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.