ತುಮಕೂರು: ಜಿಲ್ಲೆಯಲ್ಲಿ ಒಟ್ಟು 8,197 ಎಚ್ಐವಿ ಸೋಂಕಿತರಿದ್ದು, ಅವರನ್ನು ಅಸ್ಪೃಶ್ಯರಂತೆ ಕಾಣಬಾರದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಹೇಳಿದರು.
ನಗರದಲ್ಲಿ ಶುಕ್ರವಾರ ಏಡ್ಸ್ ತಡೆ ಜಾಗೃತಿ ದಿನದ ಪ್ರಯುಕ್ತ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿಮ್ಮೊಂದಿಗೆ ಸದಾ ನಾವಿದ್ದೇವೆ ಎಂದು ಸೋಂಕಿತರಿಗೆ ಧೈರ್ಯ ತುಂಬಬೇಕು. ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಸೋಂಕಿತ ವ್ಯಕ್ತಿಯನ್ನು ಮುಟ್ಟುವುದರಿಂದ, ಮಾತನಾಡುವುದರಿಂದ ಸೋಂಕು ಹರಡುವುದಿಲ್ಲ. ಈ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್, ‘ಏಡ್ಸ್ ರೋಗಕ್ಕೆ ಚಿಕಿತ್ಸೆ ಇಲ್ಲದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿತ್ತು. ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಸಮಾಜದಲ್ಲಿ ಒಳ್ಳೆಯ ಜೀವನ ನಡೆಸುವಂತೆ ಮಾಡಲು ಸಾಧ್ಯವಿದೆ. ಅಸುರಕ್ಷಿತ ಲೈಂಗಿಕ ಕ್ರಿಯೆ, ಸೋಂಕಿರುವ ವ್ಯಕ್ತಿಯ ರಕ್ತ ಪಡೆಯುವುದು, ಸಂಸ್ಕರಿಸದಿರುವ ಸೂಜಿ ಬಳಸುವುದರಿಂದ ಎಚ್ಐವಿ ಸೋಂಕು ಹರಡುತ್ತದೆ’ ಎಂದು ಮಾಹಿತಿ ನೀಡಿದರು.
ಡಿಎಚ್ಒ ಡಾ.ಚಂದ್ರಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆರ್.ವಿ.ಮೋಹನ್ದಾಸ್ ಇತರರು ಪಾಲ್ಗೊಂಡಿದ್ದರು.
ಜಾಗೃತಿ ಜಾಥಾವು ಜಿಲ್ಲಾ ಆಸ್ಪತ್ರೆ ಆವರಣದಿಂದ ಆರಂಭವಾಗಿ ಬಿಜಿಎಸ್ ವೃತ್ತದ ಮೂಲಕ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ತಲುಪಿತು. ಕರಪತ್ರ ಹಂಚುವ ಮೂಲಕ ಸಾರ್ವಜನಿಕರಲ್ಲಿ ಏಡ್ಸ್ ನಿಯಂತ್ರಣದ ಬಗ್ಗೆ ಅರಿವು ಮೂಡಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.