ತುರುವೇಕೆರೆ: ‘ಕೇಂದ್ರ ಸರ್ಕಾರ ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈತ ಸಂಘಟನೆ ಮತ್ತು ಪ್ರಗತಿಪರ ಸಂಘಟನೆಗಳು ಸೆ.27ರಂದು ನಡೆಸುತ್ತಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ತಾಲ್ಲೂಕು ಬಂದ್ ಆಚರಿಸಲು ತೀರ್ಮಾನಿಸಲಾಗಿದೆ’ ಎಂದು ತಾಲ್ಲೂಕು ರೈತ ಸಂಘದ ಗೌರವಾಧ್ಯಕ್ಷ ಅಸ್ಲಾಂಪಾಷ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ
ಮುಖಂಡರ ಜೊತೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ರೈತ ಪ್ರಗತಿಪರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಟಿಕಾಯಿತ್ ಆದೇಶದ ಮೇರೆಗೆ ಸೆ.27ರಂದು ಇಡೀ ದೇಶದಲ್ಲಿ ‘ಭಾರತ್ ಬಂದ್’ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ರೈತಸಂಘ, ಸಿಐಟಿಯು, ದಲಿತ ಸಂಘಟನೆ, ಛಲವಾದಿ ಸಂಘ, ಕಟ್ಟಡ ಕಾರ್ಮಿಕರ ಸಂಘ, ಬೀದಿಬದಿ ವ್ಯಾಪಾರಿ, ಆಟೋ ಚಾಲಕರು, ಅಂಗನವಾಡಿ, ಅಶಾಕಾರ್ಯಕರ್ತರು, ಜಯ ಕರ್ನಾಟಕ, ಕನ್ನಡ ರಕ್ಷಣ ವೇದಿಕೆ, ಜಯಕರ್ನಾಟಕ ಜನಪರ ವೇದಿಕೆ ಹಾಗೂ ಇನ್ನಿತರ ಸಂಘಟನೆಗಳು ಒಟ್ಟುಗೂಡಿ ತಾಲ್ಲೂಕು ಬಂದ್ ಆಚರಿಸಲಾಗುವುದು’ ಎಂದರು.
‘ಎಲ್ಲ ಅಂಗಡಿ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಬಂದ್ಗೆ ಬೆಂಬಲ ಸೂಚಿಸಬೇಕು. ಎಲ್ಲ ರೈತರು ಮತ್ತು ಸಂಘಟನೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸಿ ದೈಹಿಕ ಅಂತರ ಕಾಪಾಡಿಕೊಂಡು ಭಾಗವಹಿಸಿ ಬಂದ್ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಸಂಸ ದಂಡಿನಶಿವರ ಕುಮಾರ್, ಸಿಐಟಿಯು ಸಂಘಟನೆಯ ಸತೀಶ್, ಆಟೊ ಚಾಲಕರ ಸಂಘ ಅಧ್ಯಕ್ಷ ಜಿ.ಬಿ.ಗಂಗಾಧರ್, ಬೀದಿ ಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮಾರುತಿ, ಜಯ ಕರ್ನಾಟಕ ತಾಲ್ಲೂಕು ಅಧ್ಯಕ್ಷ ಸುರೇಶ್, ಕನ್ನಡ ರಕ್ಷಣ ವೇದಿಕೆ ಅಧ್ಯಕ್ಷ ಡ್ಯಾನಿಯಲ್, ಜನಪರ ಸಂಘದ ಅಧ್ಯಕ್ಷ ವೆಂಕಟೇಶ್, ಜಾಫರ್, ನಾಗಣ್ಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.