ತುಮಕೂರು: ತಮ್ಮ ಸಮುದಾಯದ (ಮಾದಿಗ) ಸದಸ್ಯರಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡದ ಹಿನ್ನೆಲೆಯಲ್ಲಿ ಬೇಸರಗೊಂಡು ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಊರ್ಡಿಗೆರೆ ಕ್ಷೇತ್ರದ ಬಿಜೆಪಿ ಸದಸ್ಯ ವೈ.ಎಚ್.ಹುಚ್ಚಯ್ಯ ಅವರು ಮುಖಂಡರ ಭರವಸೆ ಹಿನ್ನೆಲೆಯಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವಾಗ ತಲಾ 20 ತಿಂಗಳ ಅಧಿಕಾರ ಸೂತ್ರ ರಚಿಸಿ, ಮೂವರಿಗೆ ಅವಕಾಶ ನೀಡಲು ನಿರ್ಧರಿಸಲಾಗಿತ್ತು. ಮೊದಲ ಅವಧಿಗೆ ವಡ್ಡರಹಳ್ಳಿ ಕ್ಷೇತ್ರದ ಗಂಗಾಂಜನೇಯ (ಪರಿಶಿಷ್ಟ ಜಾತಿ) ಅವರನ್ನು ಆಯ್ಕೆ ಮಾಡಲಾಗಿತ್ತು. ನಂತರದ ಅವಧಿಗೆ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಊರುಕೆರೆ ಕ್ಷೇತ್ರದ ಕವಿತಾ ರಮೇಶ್ ಅವರಿಗೆ ಬಿಟ್ಟುಕೊಡಲು ನಿರ್ಧರಿಸಲಾಗಿತ್ತು.
‘ಗಂಗಾಂಜನೇಯ 50 ತಿಂಗಳು ಅಧಿಕಾರ ನಡೆಸಿದರೂ ತಮ್ಮ ಸ್ಥಾನದಿಂದ ಕೆಳಗಿಳಿದಿರಲಿಲ್ಲ. ಇದರಿಂದ ತಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ನೋವಿನಿಂದ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆ’ ಎಂದು ಹುಚ್ಚಯ್ಯ ತಿಳಿಸಿದರು.
‘ಪಕ್ಷದ ಮುಖಂಡರು ಸಮಸ್ಯೆ ಸರಿಪಡಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.