ADVERTISEMENT

ಎಸ್ಸೆಸ್ಸೆಲ್ಸಿ: ಸಿಕ್ಕಿಬಿದ್ದ ನಕಲಿ ಅಭ್ಯರ್ಥಿ- ಬಿಟ್ಟು ಕಳುಹಿಸಿದ ಸಿಬ್ಬಂದಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮ ಬಯಲು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 5:52 IST
Last Updated 12 ಏಪ್ರಿಲ್ 2022, 5:52 IST
   

ತಿಪಟೂರು (ತುಮಕೂರು):ನಗರದಠಾಗೋರ್ ವಿದ್ಯಾಸಂಸ್ಥೆ ಪರೀಕ್ಷಾ ಕೇಂದ್ರದಲ್ಲಿಸೋಮವಾರ ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿಸಿಕ್ಕಿ ಬಿದ್ದಿದ್ದಾನೆ. ಆದರೆ, ಪರೀಕ್ಷಾ ಕೇಂದ್ರದ ಸಿಬ್ಬಂದಿ ಆತನನ್ನು ಪೊಲೀಸರಿಗೆ ಒಪ್ಪಿಸದೆ ಬಿಟ್ಟು ಕಳಿಸಿದ್ದಾರೆ.

ಮಂಜುನಾಥ್ ಎಂಬ ಅಭ್ಯರ್ಥಿ ಬದಲು ಮುರಳೀಧರ ಎಂಬಾತ ಪರೀಕ್ಷೆ ಬರೆಯುತ್ತಿದ್ದ. ಈ ವಿಚಾರ ಪರೀಕ್ಷಾ ಕೇಂದ್ರದ ಅಧಿಕಾರಿ, ಸಿಬ್ಬಂದಿ ಗಮನಕ್ಕೆ ಬರುತ್ತಿದ್ದಂತೆಯೇ ಉತ್ತರ ಪತ್ರಿಕೆ ಪಡೆದು ನಕಲಿ ಅಭ್ಯರ್ಥಿಯನ್ನು ಪರೀಕ್ಷಾ ಕೇಂದ್ರದಿಂದ ಹೊರ ಹಾಕಿದರು.

ಖಾಸಗಿಯಾಗಿ ನೋಂದಾಯಿಸಿಕೊಂಡಿದ್ದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಈ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದರು. ಬದಲಿ ಅಭ್ಯರ್ಥಿ ಪರೀಕ್ಷೆ ಬರೆಯುತ್ತಿರುವ ಮಾಹಿತಿಯನ್ನು ಕೆಲವರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಅವರು ಪರೀಕ್ಷಾ ಕೇಂದ್ರಕ್ಕೆ ಮಾಹಿತಿ ನೀಡಿದ್ದರು. ಪರಿಶೀಲಿಸಿದಾಗ ನಕಲಿ ಅಭ್ಯರ್ಥಿ ಪರೀಕ್ಷೆ ಬರೆಯುತ್ತಿರುವುದು ಬೆಳಕಿಗೆ ಬಂದಿದೆ.

ADVERTISEMENT

ಮಂಜುನಾಥ್ ಪರವಾಗಿ ವಿಜ್ಞಾನ ಪರೀಕ್ಷೆ ಮಾತ್ರವಲ್ಲ, ಇತರ ಪತ್ರಿಕೆಗಳ ಪರೀಕ್ಷೆಯನ್ನೂ ಮುರಳೀಧರ ಬರೆದಿರುವ ಅನುಮಾನ ವ್ಯಕ್ತವಾಗಿದೆ. ನಕಲಿ ಅಭ್ಯರ್ಥಿ ಎಂಬುದು ಗೊತ್ತಾದ ತಕ್ಷಣ ಆತನನ್ನು ವಿಚಾರಣೆಗಾಗಿ ಪೊಲೀಸರ ವಶಕ್ಕೆ ನೀಡುವ ಬದಲು, ಬಿಟ್ಟು ಕಳಿಸಿದ್ದಾರೆ.

‘ಈ ರೀತಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ತಕ್ಷಣ ಪರೀಕ್ಷಾ ಕೇಂದ್ರದ ಸಿಬ್ಬಂದಿ ಆತನನ್ನು ಪೊಲೀಸರ ವಶಕ್ಕೆ ನೀಡಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಪರೀಕ್ಷಾ ಕೇಂದ್ರದಿಂದ ಹೊರಗೆ ಕಳುಹಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ. ನಂಜಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.