
ತುಮಕೂರು: ಪತ್ರಕರ್ತರು ಸಮಾಜದಲ್ಲಿ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು. ಸತ್ಯವನ್ನು ಎಂದೂ ಮರೆಮಾಚಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಬುಧವಾರ ಸಲಹೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ‘ಅಕ್ಷರ ನಿಧಿ’ ಪ್ರತಿಭಾ ಪುರಸ್ಕಾರ ಮತ್ತು ಜಿ.ಪರಮೇಶ್ವರ– ಕನ್ನಿಕಾ ಪರಮೇಶ್ವರಿ ಪ್ರತಿಭಾ ಪುರಸ್ಕಾರ ನಿಧಿ ವಿತರಣಾ ಸಮಾರಂಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.
ರಾಜಕಾರಣಿಗಳು ಐದು ವರ್ಷ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಚುನಾವಣೆ ಸಮಯದಲ್ಲಿ ಅಳತೆ ಮಾಡುತ್ತಾರೆ. ಅಧಿಕಾರಿಗಳನ್ನೂ ಮತ್ತೊಂದು ರೀತಿಯಲ್ಲಿ ಅಳತೆ ಮಾಡಲಾಗುತ್ತದೆ. ಅದೇ ರೀತಿ ಪತ್ರಕರ್ತರಾದವರು ಸಮಾಜಕ್ಕೆ ಹೊಣೆಗಾರರಾಗಿರಬೇಕು. ಜನರ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಹೇಳಿದರು.
ವದಂತಿ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ ಶೀಘ್ರವೇ ಕಾಯ್ದೆಯೊಂದನ್ನು ಜಾರಿಗೆ ತರಲಾಗುವುದು. ಪರಿಶೀಲಿಸದೆ, ಖಚಿತಪಡಿಸಿಕೊಳ್ಳದೆ ಸುದ್ದಿ ಪ್ರಕಟಿಸಬಾರದು. ಎಲ್ಲಕ್ಕೂ ವಿಶ್ವಾಸಾರ್ಹತೆ ಮುಖ್ಯವಾಗುತ್ತದೆ. ವ್ಯಕ್ತಿ ಗೌರವ, ಖಾಸಗಿತನ ಕಾಪಾಡಬೇಕು. ಬರಹಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಬಾರದು ಎಂದರು.
ಪತ್ರಕರ್ತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಸಿದ್ಧಾರ್ಥ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಸಿಗುವಂತೆ ಮಾಡಲು ಆರೋಗ್ಯ ಕಾರ್ಡ್ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಅಧ್ಯಕ್ಷ ಎಲ್.ಯೋಗೇಶ್, ‘ಶಿಕ್ಷಣ ಸಂಸ್ಥೆಗಳಲ್ಲಿ ರಿಯಾಯಿತಿ ದರದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರವೇಶ ಕೊಡಿಸುವ ಪ್ರಯತ್ನ ನಡೆದಿದೆ’ ಎಂದು ಹೇಳಿದರು.
ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.