
ತುಮಕೂರು: ‘ಖೇಲೊ ಇಂಡಿಯಾ’ ಕಾರ್ಯಕ್ರಮದ ಭಾಗವಾಗಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬುಧವಾರ ‘ಯುವ ಶಕ್ತಿ ಕಾ ಉತ್ಸವ– ಸಂಸದ ಖೇಲ್ ಮಹೋತ್ಸವ’ ಕ್ರೀಡಾಕೂಟ ಆಯೋಜಿಸಲಾಗಿತ್ತು.
ತಮಕೂರಿನ ಭೂಮಿ ಮತ್ತು ಚಾಮುಂಡೇಶ್ವರಿ ತಂಡಗಳು ಕಬಡ್ಡಿ ಪಂದ್ಯದಲ್ಲಿ ಮುಖಾಮುಖಿಯಾದವು. ಭೂಮಿ ತಂಡ ಸೋಲು ಅನುಭವಿಸಿತು. ವಿವೇಕಾನಂದ ಕ್ರೀಡಾ ಸಂಸ್ಥೆ, ವಿದ್ಯಾವಾಹಿನಿ ತಂಡಗಳ ಮಧ್ಯೆ ಕೊಕ್ಕೊ ಪಂದ್ಯ ನಡೆಯಿತು. ವಿವೇಕಾನಂದ ಸಂಸ್ಥೆ ಆಟಗಾರರು ಗೆಲುವಿನ ನಗೆ ಬೀರಿದರು.
ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ‘ಮುಂದಿನ ಪೀಳಿಗೆಯ ಆರೋಗ್ಯ, ಬದುಕನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಂದ್ಯಗಳನ್ನು ಏರ್ಪಡಿಸಲಾಗುತ್ತದೆ. ಕ್ರೀಡಾ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಗೊಲ್ಲಹಳ್ಳಿ ಬಳಿ 50 ಎಕರೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ಬೆಂಗಳೂರಿಗೆ ಕೊಡುವ ಆದ್ಯತೆಯನ್ನು ತುಮಕೂರಿಗೂ ನೀಡಲಾಗುವುದು’ ಎಂದು ತಿಳಿಸಿದರು.
ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದಾರೆ. ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆಡುಮುಟ್ಟದ ಸೊಪ್ಪಿಲ್ಲ, ಪ್ರಧಾನಿ ಮಾಡದ ಕೆಲಸಗಳಿಲ್ಲ. ಈ ಬಾರಿ ಕ್ರೀಡಾ ಕ್ಷೇತ್ರಕ್ಕೆ ₹3,500 ಕೋಟಿಗೂ ಹೆಚ್ಚು ಅನುದಾನ ಮೀಸಲಿಟ್ಟಿದ್ದಾರೆ ಎಂದರು.
ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಡಾ.ಎಂ.ಆರ್.ಹುಲಿನಾಯ್ಕರ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.