ತುಮಕೂರು: ಜನಸಾಮಾನ್ಯರು, ಚಿಂತಕರು, ತಜ್ಞರ ಜೊತೆ ಚರ್ಚಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗಜೇಂದ್ರ ಕುಮಾರ್ಗೌಡ ಇಲ್ಲಿ ಶನಿವಾರ ಹೇಳಿದರು.
ಖಾಲಿ ಹುದ್ದೆಗಳ ಭರ್ತಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಭ್ರಷ್ಟಾಚಾರ ರಹಿತ, ಪಾರದರ್ಶಕ, ಜವಾಬ್ದಾರಿಯುತ ಆಡಳಿತ ನೀಡಲು ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಾಯುಕ್ತ ಬಲಪಡಿಸಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಭ್ರಷ್ಟಾಚಾರಮುಕ್ತ ದಕ್ಷ ಆಡಳಿತ, ಆರೋಗ್ಯ, ಶಿಕ್ಷಣ, ಕೃಷಿ, ಮಹಿಳೆ ಮತ್ತು ಕುಟುಂಬ ಕಲ್ಯಾಣ, ಯುವಜನತೆ, ಪ್ರಾದೇಶಿಕತೆ, ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿ, ಉದ್ದಿಮೆ ಹಾಗೂ ಸಂಘಟಿತ, ಅಸಂಘಟಿತ ಕಾರ್ಮಿಕರ ಕಲ್ಯಾಣ ಸೇರಿ 9 ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರಣಾಳಿಕೆ ತಯಾರಿಸಲಾಗಿದೆ. ಈ ಅಂಶಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಮದ್ಯ ನಿಷೇಧ, ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡುವುದು. ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ, ತಾಲ್ಲೂಕಿಗೆ ಒಂದು ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ ಇದೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಲಾಗುವುದು. ಗ್ರಾಮಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಕೆಆರ್ಎಸ್ ಪದಾಧಿಕಾರಿಗಳಾದ ಗುರುಪ್ರಸಾದ್, ಹನುಮ ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.