ತುಮಕೂರು: ‘ವಿಧಾನಸಭೆ ಪ್ರತಿಪಕ್ಷ ನಾಯಕರು ಯಾರು ಆಗಬೇಕು ಎಂಬುದನ್ನು ಪಕ್ಷದ ವರಿಷ್ಠರು ಆದಷ್ಟು ಬೇಗ ತೀರ್ಮಾನ ಮಾಡಲಿದ್ದಾರೆ. ಸಿದ್ಧರಾಮಯ್ಯ, ಎಚ್.ಕೆ.ಪಾಟೀಲ್ ಸೇರಿದಂತೆ ಅನೇಕ ನಾಯಕರ ಹೆಸರುಗಳು ಕೇಳಿ ಬರುತ್ತಿವೆ. ಯಾರೇ ಆದರೂ ನಮ್ಮ ನಾಯಕರೇ’ ಎಂದು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ,‘ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೊ ಇಲ್ಲವೊ ಗೊತ್ತಿಲ್ಲ. ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಆಗುವುದಿಲ್ಲ ಎನ್ನುವುದಾದರೆ ಬೇರೇ ತೀರ್ಮಾನ ಮಾಡುತ್ತಾರೆ. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ’ ಎಂದು ಹೇಳಿದರು.
'ಮಧ್ಯಂತರ ಚುನಾವಣೆ ನಡೆಯುತ್ತದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಚುನಾವಣೆ ಬಂದರೆ ಅದನ್ನು ಎದುರಿಸಲು ನಮ್ಮ ಪಕ್ಷ ಸಿದ್ಧವಾಗಿದೆ. ಏನಾಗುತ್ತೊ ನೋಡೋಣ' ಎಂದರು.
‘ಅನರ್ಹ ಶಾಸಕರಿಗೆ ತಮ್ಮ ತಪ್ಪಿನ ಅರಿವಾಗಿದೆ. ಅವರನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಸನ್ನಿವೇಶ ಉದ್ಭವಿಸುವುದಿಲ್ಲ. ನಮಗೂ ಮಾನವೀಯತೆ ಇದೆ. ಅವರ ಬಗ್ಗೆ ಅನುಕಂಪವಿದೆ’ ಎಂದರು.
‘ಬಿಜೆಪಿ ಸರ್ಕಾರ ಎಷ್ಟು ದಿನ ಇರುತ್ತದೆ, ಇರುವುದಿಲ್ಲ ಎಂಬುದರ ಬಗ್ಗೆ ಸಮಯ ನಿಗದಿಯನ್ನು ನಾನು ಮಾಡಲ್ಲ. ಆದರೆ, ಈ ಸರ್ಕಾರ ಹೆಚ್ಚು ಕಾಲ ಇರಲ್ಲ’ ಎಂದು ಡಾ.ಪರಮೇಶ್ವರ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಸೋಲಿನ ಕುರಿತು ಅಧ್ಯಯನಕ್ಕೆ ಕೆಪಿಸಿಸಿ ಸತ್ಯ ಶೋಧನಾ ಸಮಿತಿ ರಚನೆ ಮಾಡಿದೆ. ಸಮಿತಿ ಶೀಘ್ರ ಕೊಡಲಿದೆ. ಇದರಲ್ಲಿ ಯಾರ ಲೋಪವಿದೆಯೋ ಅವರ ವಿರುದ್ಧ ಪಕ್ಷದ ವರಿಷ್ಠರು ಕ್ರಮ ಜರುಗಿಸಲಿದ್ದಾರೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.