ADVERTISEMENT

ಸುಭದ್ರ ಆಡಳಿತಕ್ಕೆ ಮತದಾನ ಅಗತ್ಯ

ತಾಲ್ಲೂಕು ಕಚೇರಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 1:28 IST
Last Updated 26 ಜನವರಿ 2021, 1:28 IST
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ನ್ಯಾಯಾಧೀಶ ಶಿವರಾಜ್ ವಿ. ಸಿದ್ದೇಶ್ವರ
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ನ್ಯಾಯಾಧೀಶ ಶಿವರಾಜ್ ವಿ. ಸಿದ್ದೇಶ್ವರ   

ಗುಬ್ಬಿ: ಪ್ರಜಾಪ್ರಭುತ್ವದಲ್ಲಿ ಆಡಳಿತ ನಿರ್ವಹಣೆ ಸುಭದ್ರವಾಗಿ ಇರಬೇಕಾದರೆ ಮತದಾರರ ಪಾತ್ರ ಮುಖ್ಯವಾಗಿದೆ. ಮತದಾರರು ಇದರ ಮಹತ್ವ ಅರಿತು ಅರ್ಹ ವ್ಯಕ್ತಿಗೆ ಮತ ಚಲಾಯಿಸಬೇಕಾದ ಅಗತ್ಯ ಇದೆ ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಶಿವರಾಜ್ ವಿ. ಸಿದ್ದೇಶ್ವರ ತಿಳಿಸಿದರು.

ಪಟ್ಟಣದ ಕಂದಾಯ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮತ ಚಲಾಯಿಸುವುದು ಎಲ್ಲರ ಹಕ್ಕು ಮತ್ತು ಕರ್ತವ್ಯ. ಮತ ಚಲಾವಣೆಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ಇಲ್ಲ. ಲಿಂಗ, ಜಾತಿ, ಧರ್ಮಭೇದ ಯಾವುದನ್ನು ಪರಿಗಣಿಸದೆ ನಿರ್ಭಯವಾಗಿ ಮತ ಚಲಾಯಿಸಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.

ADVERTISEMENT

ಹೆಚ್ಚುವರಿ ಕಿರಿಯ ಶ್ರೇಣಿ ನ್ಯಾಯಾಧೀಶ ಎನ್. ಗಣೇಶ್ ಮಾತನಾಡಿ, ಮತದಾನವು ಜನತೆಯು ಯಾವುದಾದರೂ ಅಭ್ಯರ್ಥಿಗಳ ಬಗ್ಗೆ ತಮ್ಮ ನಿರ್ಣಯ ಸೂಚಿಸಲು ಅನುವು ಮಾಡಿಕೊಡುವ ಪ್ರಕ್ರಿಯೆಯಾಗಿದೆ. 18 ವರ್ಷ ತುಂಬಿದ ಎಲ್ಲರಿಗೂ ಮತ ಚಲಾಯಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಅರ್ಹವಿರುವ ಎಲ್ಲಾ ಮತದಾರರಿಗೂ ಚುನಾವಣೆಗಳಲ್ಲಿ ಮತ ಚಲಾಯಿಸುವಂತೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಹೇಳಿದರು.

ಅಧ್ಯಕ್ಷತೆವಹಿಸಿದ್ದ ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ ಮಾತನಾಡಿ, ದೇಶದ ಉತ್ತಮ ಭವಿಷ್ಯದ ದೃಷ್ಟಿಯಿಂದ ಎಲ್ಲಾ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮತದಾರರನ್ನು ಜಾಗೃತಿಗೊಳಿಸಿ ಪೂರ್ಣಪ್ರಮಾಣದಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದರು.

ಮತದಾರರು ಪೂರ್ಣ ಪ್ರಮಾಣದಲ್ಲಿ ಮತದಾನದಲ್ಲಿ ಪಾಲ್ಗೊಂಡಾಗ ಆರೋಗ್ಯಕರ ಪ್ರಜಾಪ್ರಭುತ್ವಕ್ಕಾಗಿ ಯೋಗ್ಯರನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮತದಾರರೊಬ್ಬರಿಗೆ ತಹಶೀಲ್ದಾರ್‌ ಅವರು ಸಾಂಕೇತಿಕವಾಗಿ ಸ್ಮಾರ್ಟ್ ಎಪಿಕ್ ಕಾರ್ಡ್‌ ವಿತರಿಸಿದರು. ಕಾರ್ಯಕ್ರಮದಲ್ಲಿದ್ದ ಎಲ್ಲರಿಗೂ ನ್ಯಾಯಾಧೀಶ ಶಿವರಾಜ್ ವಿ. ಸಿದ್ದೇಶ್ವರ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ಶಶಿಕಲಾ, ಉಪ ತಹಶೀಲ್ದಾರ್ ಖಾನ್, ವಕೀಲರ ಸಂಘದ ಅಧ್ಯಕ್ಷ ಟಿ.ಜಿ. ಷಡಕ್ಷರಿ, ಶಿರಸ್ತೇದಾರ್ ಶ್ರೀರಂಗ, ಆರ್‌ಆರ್‌ಟಿ ಶಿರಸ್ತೇದಾರ್ ಲೋಕೇಶ್, ಕಸಬಾ ಕಂದಾಯ ನಿರೀಕ್ಷಕ ರಮೇಶ್, ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.